ತಾಕತ್ತಿದ್ದರೆ ಕುಮಟಾ, ಶಿರಸಿ ಆಸ್ಪತ್ರೆಗೆ ಹಣ ಕೊಡಿ | ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅಸಮಾಧಾನ
ಶಿರಸಿ/ಕಾರವಾರ: ಮುಂಬರುವ ಸ್ಥಳೀಯ ಚುನಾವಣೆಯ ಲಾಭ ಪಡೆಯುವ ಉದ್ದೇಶದಿಂದ ಸಿ.ಎಂ ಸಿದ್ದರಾಮಯ್ಯನವರು ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಗೆ ಭೇಟಿ ನೀಡಿದಂತೆ ಕಂಡುಬರುತ್ತದೆ ಎಂದು ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ನೀಡಿರುವ ಅವರು, ಹಿಂದಿನ ಅವಧಿಯ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕರಾಗಿದ್ದ ರೂಪಾಲಿ ನಾಯ್ಕ್ ಅವರ ವಿಶೇಷ ಪ್ರಯತ್ನದಿಂದ ಕಟ್ಟಡ ನಿರ್ಮಾಣಗೊಂಡಿದೆ. ಸಿದ್ಧವಾದ ಕಟ್ಟಡದ ಉದ್ಘಾಟನೆಗೆ ಮುಖ್ಯಮಂತ್ರಿಯವರೇ ಬಂದು ಹಿಂದಿನ ಬಿಜೆಪಿ-ಕಾಂಗ್ರೆಸ್ ಸರಕಾರಗಳ ಕಾಲದಿಂದ ಆರಂಭಗೊಂಡು ನಡೆದ ಕಾಮಗಾರಿಗಳ ಉದ್ಘಾಟನೆ ಮಾಡಿ ಅಭಿವೃದ್ಧಿಯನ್ನು ಕೇವಲ ಕಾಂಗ್ರೆಸ್ ಮಾತ್ರ ಮಾಡಿದೆ ಎನ್ನುವ ರೀತಿಯಲ್ಲಿ ಮಾತನಾಡಿದ್ದು ಕೇವಲ ರಾಜಕೀಯ ಉದ್ದೇಶಗಳಿಗೆ ಎನ್ನುವುದು ಸ್ಪಷ್ಟವಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹು ಚರ್ಚಿತವಾಗಿ ಜನರ ತೀವ್ರ ವಿರೋಧಕ್ಕೆ ಕಾರಣವಾದ ನದಿ ತಿರುವು ಯೋಜನೆಗಳು, ಶರಾವತಿ ಪಂಪ್ ಸ್ಟೋರೇಜ್ ಯೋಜನೆ, ಬಂದರುಗಳ ಕಾಮಗಾರಿ, ಅರಣ್ಯ ಅತಿಕ್ರಮಣ ಸಮಸ್ಯೆ ಮತ್ತು ಎಲೆ ಚುಕ್ಕೆ ರೋಗದಿಂದ ಸಂಕಷ್ಟದಲ್ಲಿರುವ ರೈತರ ವಿಚಾರಗಳಿಗೆ ಮಳೆ ಮಾಪನದ ಸಮಸ್ಯೆ ಹೀಗೆ ಹಲವಾರು ಸಮಸ್ಯೆಗಳಿಗೆ ಯಾವುದೇ ರೀತಿಯಲ್ಲಿ ಗಮನಹರಿಸಿರುವುದು ಕಂಡುಬಂದಿಲ್ಲ. ಈ ವಿಷಯಗಳ ಕುರಿತು ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿಗಳು ಯಾವುದೇ ಪ್ರಸ್ತಾಪ ಮಾಡದಿರುವುದನ್ನು ನೋಡಿದರೆ ಮುಖ್ಯಮಂತ್ರಿಗಳ ಪ್ರವಾಸ ಕೇವಲ ರಾಜಕೀಯ ಉದ್ದೇಶಗಳಿಗಾಗಿ ಎಂಬಂತೆ ತೋರುತ್ತದೆ.
ಬರುವ ಬಜೆಟ್ ನಲ್ಲಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುತ್ತೇವೆ ಎಂದಿರುವುದು ಸ್ವಾಗತಾರ್ಹವಾದರೂ, ಕಾರವಾರದ ಕ್ರಿಮ್ಸ್ ಆಸ್ಪತ್ರೆ ಮತ್ತು ಶಿರಸಿಯ ಪಂಡಿತ್ ಜನರಲ್ ಆಸ್ಪತ್ರೆಗಳಿಗೆ ಅಗತ್ಯವಾದ ವೈದ್ಯಕೀಯ ಉಪಕರಣಗಳು ಮತ್ತು ನುರಿತ ವೈದ್ಯರುಗಳ ನಿಯೋಜನೆಯನ್ನು ಮಾಡದೆ ಕೇವಲ ಬಜೆಟ್ ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುತ್ತೇವೆ ಎಂದು ಘೋಷಿಸುವುದು ಜಿಲ್ಲೆಯ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಆಗಬಾರದು ಎಂದಿದ್ದಾರೆ.