ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನದ ವೇಳೆ ಗಲಾಟೆ-ಗದ್ದಲಗಳ ನಡುವೆ ಚರ್ಚೆ ಇಲ್ಲದೆ ಉಭಯ ಸದನಗಳಲ್ಲಿ ಅಂಗೀಕರಿಸಲ್ಪಟ್ಟಿದ್ದ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ) ವಿಧೇಯಕ’ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಈ ಕುರಿತು ಸಚಿವರ ನಿಯೋಗವು ಭೇಟಿ ಮಾಡಿ ವಿಧೇಯಕಕ್ಕೆ ಅನುಮೋದನೆ ನೀಡುವಂತೆ ಮನವಿ ಮಾಡಿತ್ತು. ಇದೀಗ ರಾಜ್ಯಪಾಲರ ಅಂಕಿತದೊಂದಿಗೆ ವಿಧೇಯಕ ಕಾನೂನಿನ ರೂಪ ಪಡೆದುಕೊಂಡಿದೆ.
ಇದೇ ವೇಳೆ, ಕರ್ನಾಟಕದ ಬಹು ನಿರೀಕ್ಷಿತ ಎಸ್ಸಿ ಒಳ ಮೀಸಲಾತಿ ಮಸೂದೆಗೂ ರಾಜ್ಯಪಾಲರು ಅಂಕಿತ ಹಾಕಿರುವುದಾಗಿ ತಿಳಿದುಬಂದಿದೆ. ಇದರಿಂದ ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ಪ್ರಮುಖ ಕಾನೂನು ಕ್ರಮಗಳಿಗೆ ಅಧಿಕೃತ ಮಾನ್ಯತೆ ದೊರೆತಂತಾಗಿದೆ.