ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮೀ ಯೋಜನೆ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ ಆರ್ಥಿಕ ನೆರವು ನೀಡುವ ಈ ಯೋಜನೆಯಲ್ಲಿ ದುರುಪಯೋಗ ನಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಮೃತಪಟ್ಟವರ ಹೆಸರಿನಲ್ಲಿ ಹಣ ಜಮೆಯಾಗಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಸಂಬಂಧಪಟ್ಟವರಿಗೆ ಇದು ದೊಡ್ಡ ಆಘಾತವಾಗಿದೆ.
ಪರಿಶೀಲನೆಯ ವೇಳೆ ಸುಮಾರು 69 ಸಾವಿರಕ್ಕೂ ಹೆಚ್ಚು ಮೃತ ವ್ಯಕ್ತಿಗಳ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿರುವುದು ಪತ್ತೆಯಾಗಿದೆ. ಒಟ್ಟು ಸುಮಾರು 79 ಕೋಟಿ ರೂಪಾಯಿ ವರ್ಗಾವಣೆಯಾಗಿರುವುದಾಗಿ ತಿಳಿದುಬಂದಿದೆ. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಉಂಟಾಗಿರುವುದಾಗಿ ಮೂಲಗಳು ಸೂಚಿಸಿವೆ. ಈ ಹಿನ್ನೆಲೆ ತಪ್ಪಾಗಿ ಜಮೆಯಾದ ಹಣವನ್ನು ಮರಳಿ ಪಡೆಯಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಸಂಬಂಧಿತ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಮೃತರ ಖಾತೆಗಳಿಗೆ ಜಮೆಯಾದ ಮೊತ್ತವನ್ನು ವಾಪಸ್ ಪಡೆಯುವ ಪ್ರಕ್ರಿಯೆ ಆರಂಭಿಸಲಾಗಿದೆ. ಜೊತೆಗೆ, ಮುಂದಿನ ದಿನಗಳಲ್ಲಿ ಇಂತಹ ತಪ್ಪುಗಳು ಮರುಕಳಿಸದಂತೆ ದತ್ತಾಂಶಗಳ ಸಮಗ್ರ ಪರಿಶೀಲನೆ ಹಾಗೂ ಫಲಾನುಭವಿಗಳ ಮಾಹಿತಿಯನ್ನು ನವೀಕರಿಸಲು ಆದ್ಯತೆ ನೀಡಲಾಗುತ್ತಿದೆ. ಯೋಜನೆಯ ಪಾರದರ್ಶಕತೆ ಮತ್ತು ನಿಖರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದೆ.