ಕಾರವಾರ: ಭಾರತೀಯ ಚಿತ್ರರಂಗದ ಮೇರು ನಟ ಹಾಗೂ ಬಹುಮುಖ ಪ್ರತಿಭೆಯ ಹಿರಿಯ ಕಲಾವಿದ ಅನಂತ್ ನಾಗ್ ಅವರಿಗೆ ಭಾರತೀಯ ಸಿನಿರಂಗದ ಅತ್ಯುನ್ನತ ಗೌರವವಾದ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಲಭಿಸಿರುವುದು ಉತ್ತರ ಕನ್ನಡ ಜಿಲ್ಲೆ ಹಾಗೂ ಸಮಸ್ತ ಕರ್ನಾಟಕಕ್ಕೆ ಹೆಮ್ಮೆಯ ಸಂಗತಿ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಕಳೆದ ಹಲವು ದಶಕಗಳಿಂದ ಕನ್ನಡ, ಹಿಂದಿ ಸೇರಿದಂತೆ ವಿವಿಧ ಭಾಷೆಗಳ ನೂರಾರು ಚಿತ್ರಗಳಲ್ಲಿ ಮರೆಯಲಾಗದ ಪಾತ್ರಗಳಿಗೆ ಜೀವ ತುಂಬುವ ಮೂಲಕ ಅನಂತ್ ನಾಗ್ ಅವರು ಭಾರತೀಯ ಚಿತ್ರರಂಗವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ನೈಜ ಅಭಿನಯ, ಕಲಾ ನಿಷ್ಠೆ ಹಾಗೂ ಸರಳ ವ್ಯಕ್ತಿತ್ವ ಇಂದಿನ ತಲೆಮಾರಿಗೆ ಸದಾ ಸ್ಫೂರ್ತಿಯಾಗಿದೆ ಎಂದು ಕಾಗೇರಿ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಪುತ್ರರಾಗಿರುವ ಅನಂತ್ ನಾಗ್ ಅವರು ತಮ್ಮ ಅದ್ಭುತ ಪ್ರತಿಭೆ ಮತ್ತು ಪರಿಶ್ರಮದ ಮೂಲಕ ಬೆಳೆದು ರಾಷ್ಟ್ರಮಟ್ಟದ ಈ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾಗಿರುವುದು ಜಿಲ್ಲೆಯ ಸಾಂಸ್ಕೃತಿಕ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ. ಇದು ಕೇವಲ ಒಬ್ಬ ಕಲಾವಿದನಿಗೆ ಸಂದ ಗೌರವವಲ್ಲ, ಉತ್ತರ ಕನ್ನಡ ಜಿಲ್ಲೆ ಹಾಗೂ ಇಡೀ ಕನ್ನಡ ನಾಡಿನ ಕಲಾ ಪರಂಪರೆಗೆ ಸಂದ ಶ್ರೇಷ್ಠ ಗೌರವವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ತಮ್ಮ ಕಲಾ ಸೇವೆಯ ಮೂಲಕ ರಾಷ್ಟ್ರಮಟ್ಟದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೇರಿಸಿದ ನೆಲದ ಹೆಮ್ಮೆಯ ಪುತ್ರ ಅನಂತ್ ನಾಗ್ ಅವರಿಗೆ ಜಿಲ್ಲೆಯ ಸಮಸ್ತ ನಾಗರಿಕರ ಪರವಾಗಿ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಕಾಗೇರಿ ತಿಳಿಸಿದ್ದಾರೆ. ಭಗವಂತ ಅವರಿಗೆ ಉತ್ತಮ ಆಯುಷ್ಯ ಹಾಗೂ ಆರೋಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.