ಸಿದ್ದಾಪುರ: ಯಾವುದೇ ಶಾಲೆ ಉತ್ತಮ ಶಾಲೆಯಾಗಿ ರೂಪುಗೊಳ್ಳುವುದು ಅಲ್ಲಿನ ಶಿಕ್ಷಕರ ಸಮರ್ಪಣೆ, ವಿದ್ಯಾರ್ಥಿಗಳಿಗೆ ನೀಡುವ ಗುಣಮಟ್ಟದ ಶಿಕ್ಷಣ ಹಾಗೂ ಸಂಸ್ಕಾರದಿಂದ ಎಂದು ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಹೇಳಿದರು.
ತಾಲೂಕಿನ ತ್ಯಾಗಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಟ್ರಸ್ಟ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ದೇಣಿಗೆಯಾಗಿ ನೀಡಿ ಅವರು ಮಾತನಾಡಿದರು.
ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಕಾಳಜಿಯಿಂದ ಬೆಳೆಸಿದಾಗ ಮಾತ್ರ ಆ ಶಾಲೆ ಉತ್ತಮ ಶಾಲೆಯಾಗಿ ಬೆಳೆಯುತ್ತದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಖಾಸಗಿ ಶಾಲೆಗಳಿಗಿಂತಲೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ನೀಡಲು ಸಮಾಜದ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಶುದ್ಧ ಆಹಾರ ಮತ್ತು ಕುಡಿಯುವ ನೀರು ಉತ್ತಮ ಆರೋಗ್ಯಕ್ಕೆ ಅತ್ಯಗತ್ಯ. ಟ್ರಸ್ಟ್ ವತಿಯಿಂದ ಹಲವು ಸರ್ಕಾರಿ ಶಾಲೆಗಳಿಗೆ ಶುದ್ಧ ನೀರಿನ ಘಟಕಗಳನ್ನು ನೀಡಿದ ಬಳಿಕ ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು, ಮಳೆಗಾಲದಲ್ಲಿ ಜ್ವರ, ನೆಗಡಿ ಮುಂತಾದ ಸಮಸ್ಯೆಗಳಿಂದ ಶಾಲೆಗೆ ಗೈರಾಗುತ್ತಿದ್ದ ವಿದ್ಯಾರ್ಥಿಗಳ ಹಾಜರಾತಿಯೂ ಹೆಚ್ಚಾಗಿದೆ ಎಂದು ಶಿಕ್ಷಕರು ಹಾಗೂ ಪಾಲಕರು ತಿಳಿಸಿರುವುದಾಗಿ ಅವರು ಹೇಳಿದರು.
ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರಾಜಾರಾಮ ಹೆಗಡೆ ಮಾತನಾಡಿ, ತ್ಯಾಗಲಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ನೀಡಿರುವ ಟ್ರಸ್ಟ್ಗೆ ಕೃತಜ್ಞತೆ ಸಲ್ಲಿಸಿ, ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳನ್ನು ಗುರುತಿಸಿ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುತ್ತಿರುವ ಟ್ರಸ್ಟ್ನ ಸೇವೆ ಶ್ಲಾಘನೀಯವಾಗಿದ್ದು, ಮುಂದೆಯೂ ಶಾಲೆಯ ಅಗತ್ಯ ಸೌಲಭ್ಯಗಳಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ ಪೈ, ಊರಿನ ಪ್ರಮುಖರಾದ ನಟರಾಜ್ ಹೆಗಡೆ ಹಾಗೂ ಇತರರು ಉಪಸ್ಥಿತರಿದ್ದರು.