ಶಿರಸಿ: ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳ ಸಮಾಜಮುಖಿ ಸೇವೆಯೇ ತಮ್ಮ ಸೇವಾ ಕಾರ್ಯಗಳಿಗೆ ಪ್ರೇರಣೆಯಾಗಿದೆ ಎಂದು ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ಅಧ್ಯಕ್ಷ ಅನಂತಮೂರ್ತಿ ಹೆಗಡೆ ಹೇಳಿದರು.
ತಾಲೂಕಿನ ಬದನಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂತೊಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಟ್ರಸ್ಟ್ ವತಿಯಿಂದ ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಿದ್ದಗಂಗಾ ಮಠವು ಅನ್ನ, ಅಕ್ಷರ ಮತ್ತು ಆಶ್ರಯದ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಹಾಗೂ ವಸತಿ ನೀಡುವ ಮೂಲಕ ಸಮಾಜಕ್ಕೆ ಅಪೂರ್ವ ಸೇವೆ ಸಲ್ಲಿಸಿದೆ. ಅಲ್ಲಿನ ಸಮಾನತೆಯ ವಾತಾವರಣ ಮತ್ತು ಸಮಾಜಮುಖಿ ಕಾರ್ಯಗಳು ತಮ್ಮ ಬದುಕಿಗೆ ದಾರಿದೀಪವಾಗಿವೆ ಎಂದು ಹೇಳಿದರು.
ಮಕ್ಕಳ ಆರೋಗ್ಯದ ದೃಷ್ಟಿಯಿಂದ ಗ್ರಾಮೀಣ ಸರ್ಕಾರಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಈಗಾಗಲೇ ಉತ್ತರ ಕನ್ನಡ ಜಿಲ್ಲೆಯ 150ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಉಚಿತ ವಾಟರ್ ಫಿಲ್ಟರ್ಗಳನ್ನು ವಿತರಿಸಲಾಗಿದೆ. ಶಿಕ್ಷಣ ಕ್ಷೇತ್ರದ ಜೊತೆಗೆ ಬಸ್ ನಿಲ್ದಾಣ, ಆಸ್ಪತ್ರೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿಯೂ ಟ್ರಸ್ಟ್ ಸೇವಾ ಕಾರ್ಯಗಳನ್ನು ಮುಂದುವರಿಸುತ್ತಿದೆ ಎಂದು ತಿಳಿಸಿದರು.
ಗ್ರಾಮಸ್ಥ ಯುವರಾಜ್ ಗೌಡ ಮಾತನಾಡಿ, ಗ್ರಾಮೀಣ ಭಾಗದ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿರುವುದು ಶ್ಲಾಘನೀಯ ಕಾರ್ಯವಾಗಿದ್ದು, ಟ್ರಸ್ಟ್ನ ಸಮಾಜಮುಖಿ ಚಟುವಟಿಕೆಗಳು ಇನ್ನಷ್ಟು ವಿಸ್ತರಿಸಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆ ನೀಡಿದ ಹಿನ್ನೆಲೆಯಲ್ಲಿ ಅನಂತಮೂರ್ತಿ ಹೆಗಡೆ ಅವರನ್ನು ಶಾಲೆಯ ಎಸ್ಡಿಎಂಸಿ ಹಾಗೂ ಗ್ರಾಮಸ್ಥರು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ ಮಾರುತಿ ಎನ್. ಸಾಳುಂಕೆ, ಎಸ್ಡಿಎಂಸಿ ಅಧ್ಯಕ್ಷ ರವಿ ಬೋರಳ್ಳಿ, ಬದನಗೋಡು ಗ್ರಾಮ ಪಂಚಾಯಿತಿ ಪಿಡಿಒ ಟಿ.ಪಿ. ಲಂಬಾಣಿ, ಶಿವಪ್ಪ ದುರ್ಗಪ್ಪ ಬೋವಿವಡ್ಡರ್ ಮುಂತಾದವರು ಉಪಸ್ಥಿತರಿದ್ದರು.