Ad
Ad
Ad
Home Local News ಜನರ ಸಮಸ್ಯೆ ಕೇಳಿದ ಸವದಿ; 15 ದಿನದಲ್ಲಿ ಪರಿಹಾರಕ್ಕೆ ಸೂಚನೆ

ಜನರ ಸಮಸ್ಯೆ ಕೇಳಿದ ಸವದಿ; 15 ದಿನದಲ್ಲಿ ಪರಿಹಾರಕ್ಕೆ ಸೂಚನೆ

0
4

ಕಾರವಾರ: ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ, ನಾಗರಿಕರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವ ಉದ್ದೇಶದಿಂದ ‘ಪ್ರಜಾಸೇವೆ ಆಂದೋಲನ’ ಆರಂಭಿಸಲಾಗಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಅವರು ಶನಿವಾರ ಅಂಕೋಲಾದ ಸ್ವಾತಂತ್ರ್ಯ ಸಂಗ್ರಾಮ ಭವನದಲ್ಲಿ ನಡೆದ ಪ್ರಜಾಸೇವೆ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ಅಗತ್ಯವಿದ್ದು, ಜನರ ನಿರೀಕ್ಷೆಗಳನ್ನು ಹುಸಿಗೊಳಿಸದೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸರ್ಕಾರಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದರು.

ಪ್ರಜಾಸೇವೆ ಆಂದೋಲನದಲ್ಲಿ ಸ್ವೀಕರಿಸುವ ಅರ್ಜಿಗಳನ್ನು 15 ದಿನಗಳೊಳಗೆ ವಿಲೇವಾರಿ ಮಾಡಬೇಕು. ತಕ್ಷಣ ಪರಿಹರಿಸಬಹುದಾದ ಸಮಸ್ಯೆಗಳಿಗೆ ಆದ್ಯತೆ ನೀಡಿ ಕೂಡಲೇ ಕ್ರಮ ಕೈಗೊಳ್ಳಬೇಕು. ಕಾನೂನಿನ ಮಿತಿಯಲ್ಲಿ ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ವಿಳಂಬವಾಗದಂತೆ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಸಕ ಸತೀಶ್ ಸೈಲ್ ಮಾತನಾಡಿ, ಪ್ರಜಾಸೇವೆ ಆಂದೋಲನದ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹರಿಸಲು ಪ್ರಯತ್ನಿಸಲಾಗುವುದು. ಅಂಕೋಲಾ ತಾಲೂಕಿನಲ್ಲಿ ತಜ್ಞ ವೈದ್ಯರ ಕೊರತೆ, ಮೀನುಗಾರರ ಸಮಸ್ಯೆ, ಬ್ರೇಕ್‌ವಾಟರ್ ಸೇರಿದಂತೆ ಹಲವು ವಿಚಾರಗಳ ಕುರಿತು ಈಗಾಗಲೇ ಚರ್ಚಿಸಲಾಗಿದೆ. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಪಕ್ಷಾತೀತವಾಗಿ ಎಲ್ಲರೂ ಕೈಜೋಡಿಸಬೇಕು ಎಂದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಾತನಾಡಿ, ಪ್ರತಿ ತಿಂಗಳ 1 ಮತ್ತು 3ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿ ಹಾಗೂ ಉಳಿದ ಶನಿವಾರಗಳಲ್ಲಿ ಶಾಸಕರ ನೇತೃತ್ವದಲ್ಲಿ ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಯಲಿದೆ. ಸಾರ್ವಜನಿಕರು ಐಪಿಜಿಆರ್‌ಎಸ್ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳ ಪ್ರಗತಿಯನ್ನು ಪ್ರತಿ ಬುಧವಾರ ಅಧಿಕಾರಿಗಳ ಮಟ್ಟದಲ್ಲಿ ಪರಿಶೀಲಿಸಲಾಗುವುದು ಎಂದರು.

ಸಭೆಯಲ್ಲಿ ಸಾರ್ವಜನಿಕರಿಂದ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ 653 ಅಹವಾಲುಗಳು ಸಲ್ಲಿಕೆಯಾದವು. ಪಡಿತರ ಚೀಟಿ, ವಸತಿ ಹಾಗೂ ರಸ್ತೆ ಸೇರಿದಂತೆ ಹಲವು ಬೇಡಿಕೆಗಳು ಪ್ರಮುಖವಾಗಿದ್ದವು.

ಪಡಿತರ ಚೀಟಿಯನ್ನು ಸಕಾರಣವಿಲ್ಲದೆ ರದ್ದುಪಡಿಸಿರುವ ಪ್ರಕರಣದಲ್ಲಿ ಕೂಡಲೇ ಚೀಟಿ ವಿತರಿಸಲು, ರೈತರ ಜಮೀನುಗಳಿಗೆ ವಿದ್ಯುತ್ ಪೂರೈಕೆಗಾಗಿ ಹೊಸ ಟಿಸಿ ಅಳವಡಿಸಲು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಕಲ್ಪಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಆರಂಭಿಸುವ ಕುರಿತಂತೆ ಬೆಂಗಳೂರಿನ ಹಣಕಾಸು ಇಲಾಖೆಯಲ್ಲಿ ಬಾಕಿ ಇರುವ ಕಡತವನ್ನು ಪರಿಶೀಲಿಸಿ ಶೀಘ್ರ ವಿಲೇವಾರಿ ಮಾಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ 27 ಮಂದಿಗೆ ಪಿಂಚಣಿ ಆದೇಶ, ಐದು ಅಪತ್‌ಮಿತ್ರರಿಗೆ ಅಗ್ನಿಶಾಮಕ ಇಲಾಖೆಯ ಕಿಟ್, ಮೂರು ಜಾನುವಾರು ಮಾಲೀಕರಿಗೆ ₹2.85 ಲಕ್ಷ ಪರಿಹಾರದ ಚೆಕ್, 161 ಮಂದಿಗೆ ಕಾರ್ಮಿಕ ಇಲಾಖೆಯ ಸುರಕ್ಷತಾ ಕಿಟ್ ಹಾಗೂ ಮದುವೆ ಧನಸಹಾಯ, ಏಳು ರೈತರಿಗೆ ಜೇನುಪೆಟ್ಟಿಗೆ ಸೇರಿದಂತೆ ವಿವಿಧ ಯಂತ್ರೋಪಕರಣಗಳನ್ನು ವಿತರಿಸಲಾಯಿತು. ಅಂಕೋಲಾ ಪುರಸಭೆಯಿಂದ ವಿಶೇಷಚೇತನರು ಸೇರಿದಂತೆ 14 ಮಂದಿಗೆ ವಿವಿಧ ಉಪಕರಣಗಳನ್ನು ನೀಡಲಾಯಿತು.

ಇದೇ ವೇಳೆ ಜಿಲ್ಲೆಯಲ್ಲಿ ಹೊಸದಾಗಿ 59 ಪಡಿತರ ಅಂಗಡಿಗಳನ್ನು ತೆರೆಯಲು ಅಧಿಸೂಚನೆ ಹೊರಡಿಸಲಾಯಿತು. ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಮಳಿಗೆಗಳ ಮೂಲಕ ಸರ್ಕಾರಿ ಸೌಲಭ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು. ಆಧಾರ್ ನೋಂದಣಿ, ಪಿಂಚಣಿ ಯೋಜನೆಗಳು ಹಾಗೂ ಎಸ್‌ಐಆರ್ ಕುರಿತು ಕೂಡ ಜಾಗೃತಿ ಕಾರ್ಯಕ್ರಮ ನಡೆಯಿತು.

NO COMMENTS

LEAVE A REPLY

Please enter your comment!
Please enter your name here

error: Content is protected !!