ಅಂಕೋಲಾ: ತಾಲೂಕಿನ ಮಾಸ್ತಿಕಟ್ಟಾ ಸಮೀಪ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಕಳೆದ ಏಪ್ರಿಲ್ 26ರಂದು ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟ ಘಟನೆ ನಡೆದಿದೆ.
ಮೃತರನ್ನು ಮಹಾರಾಷ್ಟ್ರದ ಮುಂಬೈ ಮೂಲದ ಉದಯ ಕುಟ್ಟಿ ಶೆಟ್ಟಿ (55) ಎಂದು ಗುರುತಿಸಲಾಗಿದೆ. ಅವರು ಚಲಾಯಿಸುತ್ತಿದ್ದ ಕಾರು ಯಲ್ಲಾಪುರದಿಂದ ಅಂಕೋಲಾ ಕಡೆಗೆ ಬರುತ್ತಿದ್ದ ವೇಳೆ ಬೆಳಿಗ್ಗೆ ಸುಮಾರು 6.40ರ ಸುಮಾರಿಗೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿತ್ತು.
ಅಪಘಾತದ ವೇಳೆ ಕಾರಿನಲ್ಲಿದ್ದ ಉದಯ ಶೆಟ್ಟಿ ಅವರ ಪತ್ನಿ ವಿಜಯಾ ಶೆಟ್ಟಿ (51) ಅವರಿಗೆ ತಲೆ, ಮೂಗು ಹಾಗೂ ಸೊಂಟಕ್ಕೆ ಗಾಯಗಳಾಗಿದ್ದು, ಪುತ್ರ ಶ್ರೀಕೇಶ ಶೆಟ್ಟಿ (20) ಅವರಿಗೆ ಎದೆ ಮತ್ತು ಬೆನ್ನಿಗೆ ಒಳಗಾಯಗಳಾಗಿದ್ದವು. ಚಾಲಕ ಉದಯ ಶೆಟ್ಟಿ ಅವರಿಗೂ ಕೈ, ಕಾಲು ಹಾಗೂ ಸೊಂಟಕ್ಕೆ ಗಂಭೀರ ಗಾಯಗಳಾಗಿದ್ದವು.
ಗಾಯಾಳುಗಳನ್ನು ಮೊದಲು ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಕಸ್ತೂರಬಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ನಂತರ ಉದಯ ಶೆಟ್ಟಿ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿತ್ತು. ಆದರೆ ಮೇ 16ರ ಬೆಳಗಿನ ಜಾವ 12.33ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.