ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಸಮೀಪ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಟ್ಯಾಂಕರ್ ಒಂದು ಸ್ಫೋಟಗೊಂಡು ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಸ್ಫೋಟದ ತೀವ್ರತೆಗೆ ಟ್ಯಾಂಕರ್ ಸಂಪೂರ್ಣವಾಗಿ ಹೊತ್ತಿ ಉರಿಯುತ್ತಿದ್ದು, ಬೆಂಕಿಯ ಭೀಕರತೆಯಿಂದಾಗಿ ಸ್ಥಳದ ಸಮೀಪಕ್ಕೂ ತೆರಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಘಟನೆ ನಂತರ ಟ್ಯಾಂಕರ್ ಚಾಲಕನ ಬಗ್ಗೆ ಯಾವುದೇ ಸುಳಿವು ಸಿಗದೆ ಇರುವುದಾಗಿ ತಿಳಿದುಬಂದಿದೆ. ಘಟನೆಯ ಹಿನ್ನೆಲೆ, ಅಂಕೋಲಾ–ಹುಬ್ಬಳ್ಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಉರಿಯುತ್ತಿರುವ ಟ್ಯಾಂಕರ್ನಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಟ್ಯಾಂಕರ್ ನಲ್ಲಿ ಪೆಟ್ರೋಲ್ ಅಥವಾ ಕೆಮಿಕಲ್ ಸಾಗಿಸಲಾಗುತ್ತಿದ್ದ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ತಿಳಿದುಬರಬೇಕಿದ್ದು, ಸ್ಪೋಟದ ನಿಖರ ಕಾರಣ ಕುರಿತು ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.