ಬನವಾಸಿ: ಶ್ರಾವಣ ಮಾಸದ ಕೊನೆಯ ದಿನದ ಅಂಗವಾಗಿ ಪಟ್ಟಣದ ಹಳೆಯ ಪೊಲೀಸ್ ಠಾಣಾ ಆವರಣದಲ್ಲಿರುವ ಚೌಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಶುಕ್ರವಾರ ವಿಶೇಷ ಪೂಜಾ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು.
ಬೆಳಗ್ಗೆಯಿಂದಲೇ ದೇವಾಲಯದ ಆವರಣದಲ್ಲಿ ಧಾರ್ಮಿಕ ವಾತಾವರಣ ನಿರ್ಮಾಣವಾಗಿದ್ದು, ಅಮ್ಮನವರಿಗೆ ವಿಶೇಷ ಅಲಂಕಾರ, ಅಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಭಕ್ತರು ದೇವಿಯ ದರ್ಶನ ಪಡೆದು ಕುಟುಂಬದ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದರು.
ಶ್ರಾವಣ ಮಾಸದ ಕೊನೆಯ ದಿನದ ವಿಶೇಷತೆಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪೂಜೆಯ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಬನವಾಸಿ ಪೊಲೀಸ್ ಠಾಣೆಯ ಪಿಎಸ್ಐಗಳಾದ ಮಹಾಂತಪ್ಪ ಕುಂಬಾರ, ರವೀಂದ್ರ ಬಿರಾದಾರ, ಎಎಸ್ಐಗಳಾದ ಮಣಿಮಾಲನ್ ಮೇಸ್ತ್ರಿ, ಪ್ರಶಾಂತ ನಾಯ್ಕ್, ಉಮಾ ಮಧುಕೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಕಾರ್ಯದರ್ಶಿ ಲತಾ ಜಿ. ಶೆಟ್ಟಿ, ಪತ್ರಕರ್ತ ಸುಧೀರ ನಾಯರ್, ಮಯೂರ ಸೂಗಿ, ರವಿ ಕೊಳೇಕರ್ ಹಾಗೂ ಬನವಾಸಿ ಪೊಲೀಸ್ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು.