ಬನವಾಸಿ: ತೀವ್ರ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಬನವಾಸಿ ಹೋಬಳಿಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ಬನವಾಸಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗಜಾನನ ಗೌಡ ನೇತೃತ್ವದಲ್ಲಿ ಸರ್ವ ಸದಸ್ಯರು ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಈ ಬಾರಿ ಬನವಾಸಿ ಹೋಬಳಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಮಳೆಯ ಅಭಾವದಿಂದ ಬೆಳೆಗಳಿಗೆ ಹಾನಿಯಾಗುವ ಆತಂಕವೂ ಎದುರಾಗಿದೆ.
ಹೀಗಾಗಿ ಸರ್ಕಾರ ಬನವಾಸಿ ಹೋಬಳಿಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಅಗತ್ಯ ಪರಿಹಾರ ಹಾಗೂ ವಿವಿಧ ಸರ್ಕಾರಿ ನೆರವು ಯೋಜನೆಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯ ಮೂಲಕ ಒತ್ತಾಯಿಸಿದರು.
ಬನವಾಸಿ ಭಾಗದ ರೈತರು ಮಳೆ ಕೊರತೆಯಿಂದ ಎದುರಿಸುತ್ತಿರುವ ಸಮಸ್ಯೆಯನ್ನು ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ಗಮನಕ್ಕೆ ತಂದು, ಹೋಬಳಿಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸುಭಾಷ್ ಕಾಟೇನಳ್ಳಿ, ಮುಖ್ಯ ಕಾರ್ಯನಿರ್ವಾಹಕ ಸಾರ್ಥಕ್ ಕಾಮತ್, ಸದಸ್ಯರಾದ ಪ್ರಭಾಕರ ಗೌಡ, ಪ್ರೇಮಕುಮಾರ ನಾಯ್ಕ್, ಪ್ರವೀಣ ಪಾಟೀಲ, ಅಕ್ಷತಾ ಸವಣೂರು, ಹುಳ್ಯಾಪ್ಪ ಅಜ್ಜರಣಿ ಹಾಗೂ ರೈತರಾದ ಪ್ರಕಾಶ ಗೌಡ, ಪುಟ್ಟರಾಜ ಸವಣೂರು ಮುಂತಾದವರು ಉಪಸ್ಥಿತರಿದ್ದರು.
ವರದಿ: ಸುಧೀರ್ ನಾಯರ್, ಬನವಾಸಿ.