ಬನವಾಸಿ: ಬಾಲ ಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬನವಾಸಿ ಪೊಲೀಸರು ಪಟ್ಟಣದ ವಿವಿಧ ಅಂಗಡಿ, ಹೋಟೆಲ್, ವಾಣಿಜ್ಯ ಮಳಿಗೆ ಹಾಗೂ ಕಾರ್ಖಾನೆಗಳಲ್ಲಿ ಶನಿವಾರ ತಪಾಸಣೆ ನಡೆಸಿದರು.
ಪಿಎಸ್ಐ ಮಹಾಂತಪ್ಪ ಕುಂಬಾರ ನೇತೃತ್ವದಲ್ಲಿ ನಡೆದ ತಪಾಸಣೆಯಲ್ಲಿ ವಿವಿಧ ವ್ಯಾಪಾರ ಸಂಸ್ಥೆಗಳಿಗೆ ತೆರಳಿ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳಲಾಗಿದೆಯೇ ಎಂಬುದನ್ನು ಪರಿಶೀಲಿಸಲಾಯಿತು. ಬಾಲ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವುದು ಕಾನೂನುಬಾಹಿರವಾಗಿದ್ದು, ಅಂತಹ ಪ್ರಕರಣಗಳು ಕಂಡುಬಂದರೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್ಐ ಮಹಾಂತಪ್ಪ ಕುಂಬಾರ ಎಚ್ಚರಿಕೆ ನೀಡಿದರು.
ತಪಾಸಣೆ ವೇಳೆ ಯಾವುದೇ ಸ್ಥಳದಲ್ಲೂ ಬಾಲ ಕಾರ್ಮಿಕರು ಪತ್ತೆಯಾಗಿಲ್ಲ. ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳದೆ ಅವರ ಶಿಕ್ಷಣ, ಭವಿಷ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದರು. ಬಾಲ ಕಾರ್ಮಿಕ ಪದ್ಧತಿ ಎಲ್ಲಿಯಾದರೂ ಕಂಡುಬಂದರೆ ಸಾರ್ವಜನಿಕರು ತಕ್ಷಣವೇ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡುವಂತೆ ಕೋರಿದರು.
ಈ ಸಂದರ್ಭದಲ್ಲಿ ತನಿಖಾ ಪಿಎಸ್ಐ ರವೀಂದ್ರ ಬಿರಾದಾರ ಹಾಗೂ ಬನವಾಸಿ ಪೊಲೀಸ್ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು.