ಬನವಾಸಿ: ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಕಾಲ ಗಡಿಪಾರು ಮಾಡಲಾಗಿದ್ದ ಆರೋಪಿಯೊಬ್ಬ ಗಡಿಪಾರು ಆದೇಶವನ್ನು ಉಲ್ಲಂಘಿಸಿ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬನವಾಸಿ ಪೊಲೀಸ್ ಠಾಣೆಯಲ್ಲಿ ಹೊಸ ಪ್ರಕರಣ ದಾಖಲಾಗಿದೆ.
ಬದನಗೊಡ ಗ್ರಾಮದ ಸ್ವಾಮೇಲಾ ಅಲಿಯಾಸ್ ಸುನೀಲ್ ಚಂದ್ರಪ್ಪ ಭೋವಿವಡ್ಡರ ವಿರುದ್ಧ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ, ಬೆದರಿಕೆ ಸೇರಿದಂತೆ ಒಟ್ಟು ಏಳು ಪ್ರಕರಣಗಳು ದಾಖಲಾಗಿದ್ದವು. ಆರೋಪಿಯ ಚಟುವಟಿಕೆಗಳಿಂದ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಆತನನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಪೊಲೀಸರು ಪ್ರಸ್ತಾವನೆ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ಶಿರಸಿ ಉಪವಿಭಾಗಾಧಿಕಾರಿ ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳ ನ್ಯಾಯಾಲಯವು ಆರೋಪಿಯನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡುವಂತೆ ಆದೇಶ ನೀಡಿತ್ತು.
ಅದರಂತೆ ಮಾರ್ಚ್ 17ರಂದು ಆರೋಪಿಯನ್ನು ಯಾದಗಿರಿ ಶಹರ ಪೊಲೀಸ್ ಠಾಣೆಗೆ ಹಾಜರುಪಡಿಸಲಾಗಿತ್ತು. ಆರಂಭದಲ್ಲಿ ಆತ ಯಾದಗಿರಿ ಠಾಣೆಯಲ್ಲಿ ಹಾಜರಾತಿ ದಾಖಲಿಸಿದ್ದರೂ, ಬಳಿಕ ಗಡಿಪಾರು ಆದೇಶ ಜಾರಿಯಲ್ಲಿದ್ದ ಅವಧಿಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ವಾಸಿಸದೆ ಅಲ್ಲಿಂದ ತಪ್ಪಿಸಿಕೊಂಡು ಬೇರೆಡೆ ಕದ್ದುಮುಚ್ಚಿ ಓಡಾಡುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ.
ಈ ಹಿನ್ನೆಲೆಯಲ್ಲಿ ಬನವಾಸಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಹಾಂತಪ್ಪ ಕುಂಬಾರ ನೀಡಿದ ದೂರಿನ ಮೇರೆಗೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.