ಶಿರಸಿ: ಬೇಡ್ತಿ–ಅಘನಾಶಿನಿ ನದಿ ಜೋಡಣೆ ಯೋಜನೆ ವಿರೋಧಿಸಿ ಜೂನ್ 15ರಂದು ಶಿರಸಿಯಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಯೋಜನೆ ರದ್ದುಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ತಿಳಿಸಿದೆ.
ಶಿರಸಿಯ ಉಪ ವಿಭಾಗಾಧಿಕಾರಿ (ಎಸಿ) ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ರೈತರು, ಪರಿಸರ ಹೋರಾಟಗಾರರು, ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು ಹಾಗೂ ನಾಗರಿಕರು ಭಾಗವಹಿಸಲಿದ್ದು, ಉಪ ವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು.
ಯೋಜನೆಯ ವಿರುದ್ಧ ಜನಾಭಿಪ್ರಾಯ ಸಂಗ್ರಹಿಸುವ ಉದ್ದೇಶದಿಂದ ಸಮಿತಿಯು ಪತ್ರ ಚಳುವಳಿಯನ್ನೂ ಆರಂಭಿಸಿದ್ದು, ಸಾರ್ವಜನಿಕರು ಸಹಿ ಮಾಡಿದ ಮನವಿ ಪತ್ರಗಳ ಪ್ರತಿಗಳನ್ನು ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ವಾಟ್ಸಪ್ ಸಂಖ್ಯೆ 9483511015ಕ್ಕೆ ಕಳುಹಿಸುವಂತೆ ಕೋರಿದೆ.
ಸಮಿತಿಯು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, ಬೇಡ್ತಿ–ಅಘನಾಶಿನಿ ನದಿ ಜೋಡಣೆ ಯೋಜನೆಯು ಪರಿಸರ, ಜೀವ ವೈವಿಧ್ಯ, ಅರಣ್ಯ ಸಂಪತ್ತು ಹಾಗೂ ಸ್ಥಳೀಯ ಜನರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂಬ ಆತಂಕ ವ್ಯಕ್ತಪಡಿಸಲಾಗಿದೆ. ಯೋಜನೆ ಕುರಿತು ಸರ್ಕಾರ ಮರುಪರಿಶೀಲನೆ ನಡೆಸಿ ಅದನ್ನು ಕೈಬಿಡಬೇಕು ಎಂದು ಆಗ್ರಹಿಸಲಾಗಿದೆ.
ನಮ್ಮ ನದಿಗಳು ನಮ್ಮ ಜೀವನಾಡಿ. ಅವುಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಭವಿಷ್ಯದ ಪೀಳಿಗೆಗಾಗಿ ನದಿಗಳನ್ನು ಉಳಿಸಿಕೊಳ್ಳುವ ಹೋರಾಟದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಮಿತಿ ಮನವಿ ಮಾಡಿದೆ.
ಜೂನ್ 15ರಂದು ಬೆಳಿಗ್ಗೆ 10.30ಕ್ಕೆ ಶಿರಸಿಯಲ್ಲಿ ನಡೆಯಲಿರುವ ಹಕ್ಕೊತ್ತಾಯ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಧಾರ್ಮಿಕ ಮುಖಂಡರು, ಪರಿಸರ ಹೋರಾಟಗಾರರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಯೋಜನೆ ವಿರೋಧಿಸಿ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸುವ ಉದ್ದೇಶ ಹೊಂದಲಾಗಿದೆ.