ಕಾರವಾರ: ವಿಕಾಸಶೀಲ ಹಾಗೂ ಸೌಹಾರ್ದಶೀಲ ಕರ್ನಾಟಕ ನಿರ್ಮಾಣದ ಉದ್ದೇಶದಿಂದ ಯುವಜನರಲ್ಲಿ ನಾಯಕತ್ವ ಗುಣ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸಲು ‘ಭಾರತ್ ಜೋಡೋ’ ಯುವ ಸಂಘಗಳ ಸ್ಥಾಪನೆಗೆ ಸದಸ್ಯತ್ವ ನೋಂದಣಿ ಅಭಿಯಾನ ಆರಂಭಿಸಲಾಗಿದೆ.
ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ತಲಾ ಒಂದು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಯುವ ಸಂಘಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. 16ರಿಂದ 35 ವರ್ಷದೊಳಗಿನ ಯುವಜನರು BJYS ಫೋರ್ಟಲ್ ಅಥವಾ ಮೊಬೈಲ್ ಆಪ್ ಮೂಲಕ ಆಧಾರ್ ಆಧಾರಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ನೋಂದಣಿಗೆ ₹10 ಶುಲ್ಕ ನಿಗದಿಪಡಿಸಲಾಗಿದ್ದು, ಒಬ್ಬ ವ್ಯಕ್ತಿಗೆ ಒಂದು ಸಂಘದಲ್ಲಿ ಮಾತ್ರ ಸದಸ್ಯರಾಗಲು ಅವಕಾಶವಿದೆ.
ಪ್ರತಿಯೊಂದು ಯುವ ಸಂಘ ರಚನೆಗೆ ಕನಿಷ್ಠ 100 ಸದಸ್ಯರ ನೋಂದಣಿ ಕಡ್ಡಾಯವಾಗಿದ್ದು, 15 ಸದಸ್ಯರ ಕಾರ್ಯಕಾರಿ ಸಮಿತಿ ಇರಲಿದೆ. ವಿವಿಧ ಜಾತಿ, ಧರ್ಮ, ವರ್ಗ, ಭಾಷೆ, ಜನಾಂಗ ಹಾಗೂ ಸಮುದಾಯಗಳ ಯುವ ಪ್ರತಿನಿಧಿಗಳು ಕಾರ್ಯಕಾರಿ ಸಮಿತಿಯಲ್ಲಿ ಭಾಗಿಯಾಗಲಿದ್ದಾರೆ.
ಯುವಜನರನ್ನು ಒಗ್ಗೂಡಿಸುವ ಮೂಲಕ ಸೌಹಾರ್ದಶೀಲ ಹಾಗೂ ವಿಕಾಸಶೀಲ ಕರ್ನಾಟಕ ನಿರ್ಮಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರದಿಂದ ಬಂಡವಾಳ ಅನುದಾನ ಕೂಡ ಲಭ್ಯವಾಗಲಿದೆ.
ಈ ಯುವ ಸಂಘಗಳು ಕ್ರೀಡೆ ಮತ್ತು ಫಿಟ್ನೆಸ್ ಜೊತೆಗೆ ಕೆರೆ, ಕಲ್ಯಾಣಿ ಸ್ವಚ್ಛತೆ, ಅರಣ್ಯ ಹಾಗೂ ಪರಿಸರ ಸಂರಕ್ಷಣೆ, ಆರೋಗ್ಯ, ಸಂಸ್ಕೃತಿ, ಸಾಮಾಜಿಕ ಸಾಮರಸ್ಯ ಮತ್ತು ಯುವ ಸಬಲೀಕರಣಕ್ಕೆ ಸಂಬಂಧಿಸಿದ ವಿವಿಧ ಜಾಗೃತಿ ಅಭಿಯಾನಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿವೆ.
ಆಸಕ್ತ ಯುವಜನರು bjys.karnataka.gov.in ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಸದಸ್ಯತ್ವಕ್ಕೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಥವಾ ಆಯಾ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.