ಶಿರಸಿ: ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಬಿಜೆಪಿ ದುರುಪಯೋಗಪಡಿಸಿಕೊಂಡಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಐಸಿಸಿ ಕಾರ್ಯದರ್ಶಿ ಅಂಜಲಿ ನಿಂಬಾಳ್ಕರ್ ಅವರು ದಾಖಲೆಗಳನ್ನು ಬಹಿರಂಗಪಡಿಸಬೇಕು. ಇಲ್ಲವಾದರೆ ಬೇಷರತ್ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಸದಾನಂದ ಭಟ್ ನಿಡಗೋಡು ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಎಸ್ಐಆರ್ ಅನ್ನು ದುರುಪಯೋಗಪಡಿಸಿಕೊಂಡು ಬಿಜೆಪಿ ಹಲವು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ಬಳಿ ದಾಖಲೆಗಳಿವೆ ಎಂದು ಅಂಜಲಿ ನಿಂಬಾಳ್ಕರ್ ಆರೋಪಿಸಿರುವುದಾದರೆ, ಆ ದಾಖಲೆಗಳನ್ನು ಸಾರ್ವಜನಿಕರ ಮುಂದಿಡಬೇಕು. ಕೇವಲ ರಾಜಕೀಯ ಪ್ರಚಾರಕ್ಕಾಗಿ ಆರೋಪ ಮಾಡಿ ನಂತರ ಮೌನವಾಗಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಚುನಾವಣಾ ಆಯೋಗವು ಎಸ್ಐಆರ್ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸುತ್ತಿದ್ದು, ಈ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಸಹ ಸಮ್ಮತಿ ಸೂಚಿಸಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಉದ್ದೇಶಕ್ಕಾಗಿ ಜನರಲ್ಲಿ ಗೊಂದಲ ಮೂಡಿಸುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡಬಾರದು ಎಂದು ಅವರು ಹೇಳಿದ್ದಾರೆ.
ಬಿಜೆಪಿ ದೇಶ ಹಾಗೂ ವಿವಿಧ ರಾಜ್ಯಗಳಲ್ಲಿ ಜನರ ವಿಶ್ವಾಸದ ಆಧಾರದ ಮೇಲೆ ಅಧಿಕಾರಕ್ಕೆ ಬಂದಿದೆಯೇ ಹೊರತು ಯಾವುದೇ ಅಕ್ರಮ ಮಾರ್ಗದಿಂದಲ್ಲ. ಇದಕ್ಕೆ ಕೇರಳ ಮತ್ತು ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಚುನಾವಣೆಗಳೇ ಸಾಕ್ಷಿ ಎಂದು ಅವರು ತಿಳಿಸಿದ್ದಾರೆ.
ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ನಾಗರಿಕತ್ವವೇ ಪ್ರಶ್ನೆಯಾಗುತ್ತದೆ ಎಂಬ ಅಂಜಲಿ ನಿಂಬಾಳ್ಕರ್ ಅವರ ಹೇಳಿಕೆಯನ್ನು ಟೀಕಿಸಿರುವ ಸದಾನಂದ ಭಟ್, ನಾಗರಿಕತ್ವಕ್ಕೆ ಅಗತ್ಯ ದಾಖಲೆಗಳ ಕುರಿತು ಸಮರ್ಪಕ ಮಾಹಿತಿ ಇಲ್ಲದೆ ಅವರು ಮಾತನಾಡಿರುವಂತಿದೆ ಎಂದು ಆರೋಪಿಸಿದ್ದಾರೆ.
ಅಕ್ರಮ ವಲಸಿಗರ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಕಾಂಗ್ರೆಸ್, ಈ ಹಿಂದೆ ಅಧಿಕಾರದಲ್ಲಿದ್ದಾಗ ಅಥವಾ ಗಡಿ ರಾಜ್ಯಗಳಲ್ಲಿ ತನ್ನ ಆಡಳಿತವಿದ್ದಾಗ ಯಾವ ಕ್ರಮ ಕೈಗೊಂಡಿತ್ತು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದ್ದಾರೆ.
ರಾಜ್ಯ ಸರ್ಕಾರ ಎಸ್ಐಆರ್ ನೆಪದಲ್ಲಿ ಪಿಆರ್ಸಿ ನೀಡುತ್ತಿರುವುದು ಸಾಂವಿಧಾನಿಕವಾಗಿ ಎಷ್ಟು ಸಮಂಜಸ ಎಂಬುದನ್ನೂ ಕಾಂಗ್ರೆಸ್ ಸ್ಪಷ್ಟಪಡಿಸಬೇಕು. ಅಕ್ರಮವಾಗಿ ಮತದಾರರ ಹೆಸರು ಸೇರ್ಪಡೆಗೆ ಇದು ಕಾರಣವಾಗುವ ಸಾಧ್ಯತೆಯಿದೆ ಎಂದು ಅವರು ಆರೋಪಿಸಿದ್ದಾರೆ.
ಬಿಜೆಪಿ ತನ್ನ ಕಾರ್ಯಕರ್ತರ ಮೂಲಕ ಪ್ರತಿಯೊಂದು ಬೂತ್ ಮಟ್ಟದಲ್ಲೂ ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈತಪ್ಪದಂತೆ ಕಾರ್ಯನಿರ್ವಹಿಸುತ್ತಿದೆ. ಕಾಂಗ್ರೆಸ್ನ ಎಸ್ಐಆರ್ ಉಸ್ತುವಾರಿಗಳು ಈ ವಿಚಾರವನ್ನು ಗಮನಿಸಬೇಕು ಎಂದು ಸದಾನಂದ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.