Thursday, July 23, 2026
Join WhatsApp Group
HomeLocal Newsನೀಟ್‌ ಹೆಸರಿನಲ್ಲಿ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಯತ್ನ

ನೀಟ್‌ ಹೆಸರಿನಲ್ಲಿ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಯತ್ನ

ಕಾರವಾರದಲ್ಲಿ ಬಿಜೆಪಿ ಪ್ರತಿಭಟನೆ

ಕಾರವಾರ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ವಿಚಾರವನ್ನು ನೆಪವಾಗಿಸಿಕೊಂಡು ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ದೇಶದಲ್ಲಿ ಅಶಾಂತಿ ಮತ್ತು ಗೊಂದಲದ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿವೆ ಎಂದು ಆರೋಪಿಸಿ, ಭಾರತೀಯ ಜನತಾ ಪಕ್ಷದ ಉತ್ತರ ಕನ್ನಡ ಜಿಲ್ಲಾ ಘಟಕವು ಗುರುವಾರ ಕಾರವಾರದಲ್ಲಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಕುಮಟಾ ಶಾಸಕ ದಿನಕರ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್, ಪ್ರಮುಖರಾದ ನಾಗರಾಜ್ ನಾಯ್ಕ, ಕೆ.ಜಿ. ನಾಯ್ಕ ಸೇರಿದಂತೆ ಜಿಲ್ಲೆಯ ಹಲವು ಬಿಜೆಪಿ ಮುಖಂಡರು, ಜನಪ್ರತಿನಿಧಿಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ವಿದ್ಯಾರ್ಥಿಗಳ ಸಮಸ್ಯೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್, ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಬಿಜೆಪಿಗೂ ತೀವ್ರ ವಿಷಾದವಿದೆ. ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಬಂಧಿತ ಸಚಿವರು ಈ ಪ್ರಕರಣದಲ್ಲಿ ಸಂಪೂರ್ಣ ಪಾರದರ್ಶಕ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕರ್ನಾಟಕದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟು ಡ್ರಗ್ಸ್ ಪ್ರಕರಣಗಳು ಹೆಚ್ಚುತ್ತಿರುವಂತಹ ಗಂಭೀರ ಸಮಸ್ಯೆಗಳ ನಡುವೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿರುವುದು ರಾಜ್ಯದ ಜನರ ಸಮಸ್ಯೆಗಳಿಗಿಂತ ರಾಜಕೀಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದನ್ನು ತೋರಿಸುತ್ತದೆ ಎಂದು ಟೀಕಿಸಿದರು.

ಬಿಜೆಪಿ ಪ್ರಮುಖ ನಾಗರಾಜ್ ನಾಯ್ಕ ಮಾತನಾಡಿ, ಸಿದ್ಧಾಂತವಿಲ್ಲದ ವಿರೋಧ ಪಕ್ಷಗಳು ಹಾಗೂ ಹೊಸದಾಗಿ ಉದಯಿಸುತ್ತಿರುವ ರಾಜಕೀಯ ಪಕ್ಷಗಳನ್ನು ತೀವ್ರವಾಗಿ ಟೀಕಿಸಿದರು. ಹಿಂದೆ ಜನತಾ ಪಕ್ಷ, ಸಮಾಜವಾದಿ ಪಕ್ಷ ಮತ್ತು ಜನತಾ ದಳಗಳಂತಹ ಪಕ್ಷಗಳು ಸ್ಪಷ್ಟ ಸಿದ್ಧಾಂತಗಳ ಆಧಾರದ ಮೇಲೆ ರಾಜಕಾರಣ ಮಾಡುತ್ತಿದ್ದವು. ಆದರೆ ಇಂದಿನ ಅನೇಕ ಹೊಸ ಪಕ್ಷಗಳಿಗೆ ಯಾವುದೇ ಸ್ಪಷ್ಟ ಸಿದ್ಧಾಂತ ಅಥವಾ ದೇಶ ಹಾಗೂ ಯುವಕರ ಹಿತಾಸಕ್ತಿಯ ದೃಷ್ಟಿಕೋನವಿಲ್ಲ ಎಂದು ಆರೋಪಿಸಿದರು.

ಈ ವೇಳೆ ಬಿಜೆಪಿ ನಾಯಕರು, ನೀಟ್ ವಿಚಾರವನ್ನು ವಿರೋಧ ಪಕ್ಷಗಳು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಮುಂದೆ ತಪ್ಪಾಗಿ ಬಿಂಬಿಸಿ ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ ಎಂದು ಆರೋಪಿಸಿದರು. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು ರಾಜಕೀಯ ಉದ್ದೇಶಕ್ಕಾಗಿ ಜನರಲ್ಲಿ ಆತಂಕ ಮತ್ತು ಅವಿಶ್ವಾಸದ ವಾತಾವರಣ ನಿರ್ಮಿಸಲಾಗುತ್ತಿದೆ ಎಂದು ದೂರಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share