ಯಲ್ಲಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಅಭಿವೃದ್ಧಿ ಕಾಮಗಾರಿಗಳ ವಿಳಂಬ ಹಾಗೂ ಸಾರ್ವಜನಿಕ ಸಮಸ್ಯೆಗಳ ವಿರುದ್ಧ ಭಾರತೀಯ ಜನತಾ ಪಾರ್ಟಿ ಯಲ್ಲಾಪುರ ಮಂಡಳ ವತಿಯಿಂದ ಜೂನ್ 15ರಂದು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಬಿಜೆಪಿ ಮಂಡಳ ಪ್ರಕಟಣೆ ನೀಡಿದ್ದು, G+2 ವಸತಿ ಯೋಜನೆಯ ಫಲಾನುಭವಿಗಳಿಗೆ ತಕ್ಷಣ ಮನೆಗಳನ್ನು ಹಂಚಿಕೆ ಮಾಡಬೇಕು ಹಾಗೂ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಬೇಕು.
ಯಲ್ಲಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ಸ್ತ್ರೀರೋಗ ತಜ್ಞರ ಹುದ್ದೆಯನ್ನು ಕೂಡಲೇ ಭರ್ತಿ ಮಾಡಬೇಕು. ಜೊತೆಗೆ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರನ್ನು ನೇಮಿಸಿ ಆರೋಗ್ಯ ಸೇವೆ ಸುಧಾರಿಸಬೇಕು.
ತಾಲೂಕಿನ ಮಳೆಮಾಪನ ಕೇಂದ್ರಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಿ, ಅವುಗಳಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಬೇಕು. ವನ್ಯಪ್ರಾಣಿಗಳ ದಾಳಿಯಿಂದ ಹಾನಿಗೊಳಗಾದ ಎಲ್ಲ ಸಂತ್ರಸ್ತರಿಗೆ ಸೂಕ್ತ ಪರಿಹಾರ ವಿತರಿಸಬೇಕು ಎಂಬ ಬೇಡಿಕೆಯನ್ನೂ ಬಿಜೆಪಿ ಮುಂದಿಟ್ಟಿದೆ.
ಕಣ್ಣಿಗೇರಿ, ಕಿರವತ್ತಿ ಹಾಗೂ ಮದನೂರು ಭಾಗಗಳಲ್ಲಿ ನಡೆಯುತ್ತಿರುವ ಕೆರೆ ತುಂಬಿಸುವ ಕಾಮಗಾರಿಗಳ ಕುರಿತು ಸಾರ್ವಜನಿಕರಲ್ಲಿ ಗೊಂದಲವಿದ್ದು, ಕಾಮಗಾರಿಯ ಸಂಪೂರ್ಣ ವಿವರವನ್ನು ಬಹಿರಂಗಪಡಿಸಬೇಕು.
ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ಕೊರತೆ, 15ನೇ ಹಣಕಾಸು ಯೋಜನೆಯ ಅನುಷ್ಠಾನದಲ್ಲಿನ ವಿಫಲತೆ ಹಾಗೂ ಗ್ರಾಮೀಣ ವಸತಿ ಯೋಜನೆಗಳ ನಿರ್ಲಕ್ಷ್ಯದ ವಿರುದ್ಧವೂ ಪ್ರತಿಭಟನೆಯಲ್ಲಿ ಧ್ವನಿ ಎತ್ತಲಾಗುವುದು ಎಂದು ತಿಳಿಸಲಾಗಿದೆ.
ಸಂಬಂಧಪಟ್ಟ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸಮರ್ಪಕ ಮಾಹಿತಿ ನೀಡುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.
ಬಿಜೆಪಿ ಯಲ್ಲಾಪುರ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ, ಪ್ರಧಾನ ಕಾರ್ಯದರ್ಶಿಗಳಾದ ನಟರಾಜ ಗೌಡ ಹಾಗೂ ರವಿ ಕೈಟ್ಕರ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.