ಕಾರವಾರ: ಕರ್ನಾಟಕ ಸರ್ಕಾರ ಹೊರಡಿಸಿರುವ ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ (PRC)-2026 ಸಂಬಂಧದ ಅಧಿಸೂಚನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಉತ್ತರ ಕನ್ನಡ ಜಿಲ್ಲಾ ಘಟಕದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ್ ಹಾಗೂ ಕುಮಟಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ, ಕರ್ನಾಟಕ ಸರ್ಕಾರದ ಅಧಿಸೂಚನೆಯು ಗಂಭೀರ ಸಾಂವಿಧಾನಿಕ, ಕಾನೂನು ಹಾಗೂ ರಾಷ್ಟ್ರೀಯ ಭದ್ರತಾ ಆತಂಕಗಳಿಗೆ ಕಾರಣವಾಗಬಹುದು ಎಂದು ಆರೋಪಿಸಿದರು.
ಪಿಆರ್ಸಿ ವ್ಯವಸ್ಥೆಯ ದುರ್ಬಳಕೆಯಿಂದ ಅಕ್ರಮ ವಲಸಿಗರಿಗೆ ಅನುಕೂಲವಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಗೃಹ ಸಚಿವಾಲಯ ತಕ್ಷಣ ಮಧ್ಯಪ್ರವೇಶಿಸಬೇಕು. ಅಲ್ಲದೆ, ಅಧಿಸೂಚನೆ ಜಾರಿಗೆ ಬಾರದಂತೆ ರಾಜ್ಯಪಾಲರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ, ಬಿಜೆಪಿ ಮುಖಂಡ ಈಶ್ವರ್ ನಾಯ್ಕ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ರಾಜೇಂದ್ರ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ನಾಯ್ಕ ಹಾಗೂ ಶಿವಾಜಿ ನರಸಾನಿ, ಜಿಲ್ಲಾ ಉಪಾಧ್ಯಕ್ಷ ಸಂಜಯ್ ಸಾಲೋಂಕೆ, ಮಂಡಲ ಅಧ್ಯಕ್ಷ ನಾಗೇಶ್ ಕುರ್ಡೇಕರ್, ಮನೋಜ್ ಭಟ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.