ಬಿಸಿಯೇರಿದ ಬಿಜೆಪಿ ನಾಯಕತ್ವ ಬದಲಾವಣೆ ಚರ್ಚೆ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ತೀವ್ರಗೊಂಡಿರುವ ನಡುವೆ, ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ಬಿಜೆಪಿ ಕೇಂದ್ರದ ವೀಕ್ಷಕರು ರಾಜ್ಯದ ಆಯ್ದ ನಾಯಕರೊಂದಿಗೆ ಆಂತರಿಕವಾಗಿ ಅಭಿಪ್ರಾಯ ಸಂಗ್ರಹ ನಡೆಸಿದ್ದು, ಸಮುದಾಯವಾರು ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ನಾಯಕರ ಅಭಿಪ್ರಾಯ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವೇಳೆ ಕೆಲವರು ನಾಯಕತ್ವ ಬದಲಾವಣೆಗೆ ಒತ್ತಾಯಿಸಿದ್ದರೂ, ಬಹುತೇಕ ನಾಯಕರು ವಿಜಯೇಂದ್ರ ಅವರೇ ಮುಂದುವರಿಯಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಗುರುವಾರ ರಾಜ್ಯದ ಸುಮಾರು 30 ಪ್ರಮುಖ ನಾಯಕರಿಂದ ಕೇಂದ್ರ ವೀಕ್ಷಕರ ತಂಡ ಅಭಿಪ್ರಾಯ ಸಂಗ್ರಹ ನಡೆಸಿದ್ದು, ಅದರಲ್ಲಿ ವಿಜಯೇಂದ್ರ ಪರವಾಗಿಯೇ ಹೆಚ್ಚು ಒಲವು ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ. ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್ ಹಾಗೂ ಉಪಾಧ್ಯಕ್ಷ ಪಾಂಡಾ ಅವರು ಅಭಿಪ್ರಾಯ ಸಂಗ್ರಹದ ವರದಿಯನ್ನು ದೆಹಲಿಗೆ ಸಲ್ಲಿಸುವ ಸಾಧ್ಯತೆ ಇದೆ.
ಮೇ 24ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತೀನ್ ನಭೀನ್ ರಾಜ್ಯಕ್ಕೆ ಭೇಟಿ ನೀಡಲಿದ್ದು, ಅವರ ರಾಜ್ಯ ಪ್ರವಾಸದ ಬಳಿಕ ಹೈಕಮಾಂಡ್ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.