Ad
Home Local News ಕುಡಿಯುವ ನೀರಿನ ಮೂಲಗಳನ್ನು ಶುದ್ದಗೊಳಿಸಿ

ಕುಡಿಯುವ ನೀರಿನ ಮೂಲಗಳನ್ನು ಶುದ್ದಗೊಳಿಸಿ

0
18

ಕಾರವಾರ: ಮಳೆಗಾಲ ಪ್ರಾರಂಭವಾಗುವ ಮುನ್ನ ಕುಡಿಯುವ ನೀರಿನ ಮೂಲಗಳು ಮತ್ತು ನೀರಿನ ಮಾದರಿಗಳನ್ನು ಪರೀಕ್ಷಿಸಿ, ನೀರು ಕಲುಷಿತಗೊಳ್ಳದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಸೂಚನೆ ನೀಡಿದರು.

ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶೀಘ್ರದಲ್ಲಿ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳು ಪ್ರಾರಂಭವಾಗುತ್ತಿದ್ದು, ಇಲ್ಲಿರುವ ಕುಡಿಯುವ ನೀರಿನ ಮೂಲಗಳನ್ನು ಪರೀಕ್ಷಿಸಿ, ಕುಡಿಯಲು ನೀರು ಯೋಗ್ಯವಾಗಿರುವ ಬಗ್ಗೆ ಖಾತರಿಪಡಿಸಿಕೊಳ್ಳುವಂತೆ ಸೂಚಿಸಿದ ಅವರು, ಜಿಲ್ಲೆಯ ಎಲ್ಲಾ ಶಾಲೆ, ಅಂಗನವಾಡಿ ಮತ್ತು ವಸತಿ ನಿಲಯಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯವಾಗದಂತೆ ಎಚ್ಚರ ವಹಿಸುವಂತೆ ಸೂಚಿಸಿದರು.

ಇಲಾಖೆಗಳ ನಡುವೆ ಸಮನ್ವಯತೆ ಮುಖ್ಯವಾಗಿದ್ದು, ಸಮನ್ವಯತೆಯ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಹಾಗೂ ಪ್ರಗತಿಯಲ್ಲಿ ಕುಂಠಿತವಾಗುತ್ತಿದೆ. ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜೆಜೆಎಂ ಕಾಮಗಾರಿಗಳು ಪೂರ್ಣಗೊಂಡಿರುವ ಕಡೆ ಹೆಸ್ಕಾಂ ವತಿಯಿಂದ ಶೀಘ್ರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು, ಕುಡಿಯುವ ನೀರಿನ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಹಾಗೂ ಟಾಸ್ಕ್ ಪೊರ್ಸ್ ಸಮಿತಿಗೆ ಕಾಮಗಾರಿಗಳ ಕುರಿತು ಪ್ರಸ್ತಾವನೆ ಸಲ್ಲಿಸುವ ಸಂದರ್ಭದಲ್ಲಿ ಸರಿಯಾದ ಮಾಹಿತಿ ಒಳಗೊಂಡ ಸಮಗ್ರ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ ಅವರು, ಕಾಮಗಾರಿಗಳ ಅಂದಾಜು ಪಟ್ಟಿ ಸಿದ್ಧಪಡಿಸುವ ಸಂದರ್ಭದಲ್ಲಿ ಇಲಾಖೆಗಳ ಮಧ್ಯ ಸಮನ್ವಯತೆ ಇರಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜನೀಯರ್ ಎಚ್ ಸತ್ಯಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತಿತರರು ಇದ್ದರು.

Ad

NO COMMENTS

LEAVE A REPLY

Please enter your comment!
Please enter your name here

error: Content is protected !!