ಶಿರಸಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ವಿವಿಧ ಸಮಾಜಮುಖಿ ಕಾರ್ಯಗಳ ಮೂಲಕ ಗ್ರಾಮೀಣ ಜನರ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿದೆ ಎಂದು ನರೇಬೈಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಹೆಗಡೆ ಹೇಳಿದರು.
ತಾಲೂಕಿನ ದೊಡ್ನಳ್ಳಿ ಗ್ರಾಮದ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಜ್ಞಾನಶ್ರೀ ಮಹಿಳಾ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಆಯೋಜಿಸಿದ್ದ ಕೇಂದ್ರದ ಸಭೆ ಹಾಗೂ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಮಹಿಳಾ ಸಬಲೀಕರಣ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಪೂರಕವಾದ ಹಲವು ಯೋಜನೆಗಳನ್ನು ರೂಪಿಸುವ ಮೂಲಕ ಸಮಾಜ ಸೇವೆ ಮಾಡುತ್ತಿದ್ದಾರೆ. ಅವರ ಕಾರ್ಯಗಳು ಶ್ಲಾಘನೀಯವಾಗಿವೆ ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಸಂಘಟನಾ ಅಧ್ಯಕ್ಷೆ ಗೌರಿ ನಾಯ್ಕ ಮಾತನಾಡಿ, ದೇವರ ಆರಾಧನೆಯ ಜೊತೆಗೆ ಜೀವನದಲ್ಲಿ ಉತ್ತಮ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಮಹಿಳೆಯರು ಕುಟುಂಬದ ಜವಾಬ್ದಾರಿಯೊಂದಿಗೆ ಸಮಾಜದ ಶ್ರೇಯೋಭಿವೃದ್ಧಿಗೂ ಶ್ರಮಿಸಬೇಕು. ಮಹಿಳೆಯರಲ್ಲಿ ಅರಿವು, ಆತ್ಮವಿಶ್ವಾಸ ಹಾಗೂ ಸಂಘಟನಾ ಮನೋಭಾವ ಬೆಳೆಸುತ್ತಿರುವ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಯೋಜನಾಧಿಕಾರಿ ಮಂಜುನಾಥ ಎಸ್.ಜಿ. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳು ಹಾಗೂ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಉದ್ದೇಶಗಳ ಕುರಿತು ಮಾಹಿತಿ ನೀಡಿದರು.
ಜ್ಞಾನಶ್ರೀ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸದಸ್ಯೆ ಅನ್ನಪೂರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುರೋಹಿತರಾದ ಪರಮೇಶ್ವರ ಅವರು ಧಾರ್ಮಿಕ ಪೂಜಾ ಕಾರ್ಯದ ನೇತೃತ್ವ ವಹಿಸಿ, ಸುಖ, ಶಾಂತಿ, ಆರೋಗ್ಯ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿ ವರಮಹಾಲಕ್ಷ್ಮಿ ಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಗಂಗಾಧರ ನಾಯ್ಕ, ಮಹಿಳಾ ಜ್ಞಾನ ವಿಕಾಸ ಕೇಂದ್ರದ ತಾಲೂಕು ಸಮನ್ವಯಾಧಿಕಾರಿ ಮಲ್ಲಿಕಾ ಶೆಟ್ಟಿ, ಸೇವಾ ಪ್ರತಿನಿಧಿ ಸುನಂದಾ ಸೇರಿದಂತೆ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.