ಮೈಸೂರು : ಯಾವುದೇ ರೀತಿಯ ಜ್ವರ ಕಂಡು ಬಂದರೂ ನಿರ್ಲಕ್ಷ್ಯ ಮಾಡದೇ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರ ಸಲಹೆ ಪಡೆದುಕೊಳ್ಳಬೇಕು ಎಂದು ಚಪ್ಪರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಂದೀಪ್ ಆರ್ ಸಾರ್ವಜನಿಕರಿಗೆ ಮನವಿ ಮಾಡಿದರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಡೆಂಘೆ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಡೆಂಘೆ ಜ್ವರವು ಈಡೀಸ್ ಇಜಿಪ್ಟೈ ಹೆಣ್ಣು ಸೊಳ್ಳೆ ಕಚ್ಚುವಿಕೆಯಿಂದ ಹರಡುವ ವೈರಸ್ ಸೋಂಕಾಗಿದ್ದು, ಸೊಳ್ಳೆಗಳು ಸಾಮಾನ್ಯವಾಗಿ ನಿಂತ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ.
ಸೋಂಕಿತ ಸೊಳ್ಳೆ ಆರೋಗ್ಯವಂತ ವ್ಯಕ್ತಿಗೆ ಕಚ್ಚಿದಾಗ ಡೆಂಘೆ ಹಾಗೂ ಚಿಕನ್ ಗುನ್ಯಾ ರೋಗಗಳು ಹರಡುತ್ತವೆ ಎಂದು ತಿಳಿಸಿದರು.ವಿಪರೀತ ಜ್ವರ, ತಲೆನೋವು, ಮೈಕೈ ನೋವು, ಕಣ್ಣಿನ ಹಿಂಭಾಗದಲ್ಲಿ ನೋವು ಹಾಗೂ ಮೈಮೇಲೆ ಕೆಂಪು ಗುಳ್ಳೆಗಳು ಕಾಣಿಸಿಕೊಳ್ಳುವುದು ಡೆಂಘೆ ಲಕ್ಷಣಗಳಾಗಿವೆ. ಡೆಂಘೆ ಮಾರಣಾಂತಿಕವಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಅಗತ್ಯ ಎಂದು ಎಚ್ಚರಿಸಿದರು.
ಯಾವುದೇ ನೀರಿನ ಸಂಗ್ರಹವನ್ನು ಸುರಕ್ಷಿತವಾಗಿ ಮುಚ್ಚಿಡಬೇಕು. ವಾರಕ್ಕೆ ಎರಡು ಬಾರಿ ನೀರಿನ ಪಾತ್ರೆಗಳನ್ನು ತೊಳೆದು ಒಣಗಿಸಿ ಮರುಭರ್ತಿ ಮಾಡಬೇಕು. ಒಡೆದ ಬಾಟಲಿ, ಟೈರ್, ತೆಂಗಿನ ಚಿಪ್ಪು ಸೇರಿದಂತೆ ನೀರು ನಿಲ್ಲುವ ತ್ಯಾಜ್ಯ ವಸ್ತುಗಳನ್ನು ತೆರವುಗೊಳಿಸಬೇಕು ಎಂದು ಸಲಹೆ ನೀಡಿದರು.ಮೈತುಂಬಾ ಬಟ್ಟೆ ಧರಿಸುವುದು, ಸೊಳ್ಳೆ ನಿವಾರಕ ದ್ರವ ಬಳಸುವುದು ಹಾಗೂ ಕಿಟಕಿ-ಬಾಗಿಲುಗಳನ್ನು ಮುಚ್ಚಿಡುವಂತಹ ಸ್ವಯಂ ರಕ್ಷಣಾ ಕ್ರಮಗಳನ್ನು ಪಾಲಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಎಚ್.ಎಸ್. ರವಿ, ಸಿಬ್ಬಂದಿಗಳಾದ ಸವಿತಾ, ಗೀತಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.