ಶಿರಸಿ: ಇಂದಿನ ಒತ್ತಡದ ಜೀವನಶೈಲಿಯಲ್ಲಿ ಅನೇಕರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ರೋಗಗಳು ಗಂಭೀರ ಸ್ವರೂಪ ಪಡೆಯುವ ಮುನ್ನವೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಅವುಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತದೆ ಎಂದು ವೈದ್ಯಾಧಿಕಾರಿ ಡಾ. ಮಮತಾ ಹೆಗಡೆ ಹೇಳಿದರು.
ತಾಲೂಕಿನ ಕಸ್ತೂರಬಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹಾಗೂ ಉರ್ದು ಶಾಲೆಯಲ್ಲಿ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಸ್ಮಿತೆ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಆಶ್ರಯದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಗರ ಹಾಗೂ ಗ್ರಾಮೀಣ ಭಾಗದ ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸಿ, ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಉಚಿತ ಆರೋಗ್ಯ ಶಿಬಿರಗಳು ಸಂಜೀವಿನಿಯಂತಿವೆ ಎಂದು ಅವರು ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ. ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಅಸ್ಮಿತೆ ಫೌಂಡೇಶನ್ನ ಕಾರ್ಯನಿರ್ವಾಹಕ ನಿರ್ದೇಶಕ ರಿಯಾಜ್ ಮಾತನಾಡಿ, ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರು ಉಚಿತ ಆರೋಗ್ಯ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಯೋಜನಾಧಿಕಾರಿ ಎಸ್.ಜಿ. ಮಂಜುನಾಥ ಮಾತನಾಡಿ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಇದೇ ವೇಳೆ ಸುಜ್ಞಾನ ನಿಧಿ, ಶಿಷ್ಯವೇತನ, ಕೆರೆ-ಹೊಳೆ ಅಭಿವೃದ್ಧಿ ಕಾರ್ಯಕ್ರಮ, ವಾತ್ಸಲ್ಯ ಯೋಜನೆ, ನಿರ್ಗತಿಕರ ಮಾಸಾಶನ, ಜನಮಂಗಲ ಹಾಗೂ ಜ್ಞಾನದೀಪ ಶಿಕ್ಷಕರ ಯೋಜನೆ ಸೇರಿದಂತೆ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಜನಪರ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಶಿಬಿರದಲ್ಲಿ 150ಕ್ಕೂ ಹೆಚ್ಚು ಜನರು ಭಾಗವಹಿಸಿ, ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರಿಂದ ಸಲಹೆ ಮತ್ತು ಮಾರ್ಗದರ್ಶನ ಪಡೆದರು.
ಕಾರ್ಯಕ್ರಮದಲ್ಲಿ ಮಾರಿಕಾಂಬಾ ಆಸ್ಪತ್ರೆಯ ವೈದ್ಯರಾದ ಡಾ. ಸೌಭಾಗ್ಯ, ಡಾ. ಮೇಘನಾ, ಬಿ.ಬಿ. ಫಾತಿಮಾ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಶರೀಫ್, ಮಹಿಳಾ ಜ್ಞಾನ ವಿಕಾಸ ಕೇಂದ್ರದ ತಾಲೂಕು ಸಮನ್ವಯ ಅಧಿಕಾರಿ ಮಲ್ಲಿಕಾ ಶೆಟ್ಟಿ, ಅಸ್ಮಿತೆ ಫೌಂಡೇಶನ್ ಸಿಬ್ಬಂದಿಗಳಾದ ರೋಹಿಣಿ ಸೈಲ್, ಲಕ್ಷ್ಮೀ, ಚೈತ್ರಾ, ಸೇವಾ ಪ್ರತಿನಿಧಿ ವಿಶಾಲ ಪ್ರಭು, ಒಕ್ಕೂಟದ ಪದಾಧಿಕಾರಿಗಳು, ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.