ಮದ್ಯದ ಅಮಲಿನಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ | ಪ್ರಕರಣ ದಾಖಲು
ಹಳಿಯಾಳ: ಪಟ್ಟಣದ ಮೌರ್ಯ ಬಾರ್ ಆ್ಯಂಡ್ ರೆಸ್ಟೋರೆಂಟ್ ಎದುರಿನ ಸಾರ್ವಜನಿಕ ರಸ್ತೆಯಲ್ಲಿ ಮದ್ಯದ ಅಮಲಿನಲ್ಲಿ ಗಲಾಟೆ ನಡೆಸಿ, ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ್ದಲ್ಲದೆ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೂ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಓರ್ವನ ವಿರುದ್ಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿರಲಗಾ ಗ್ರಾಮದ ನಿವಾಸಿ ಮಂಜುನಾಥ @ ಮಚ್ಚ್ ಮಂಜಾ ಸುಬ್ರಾಯ ಬೇಕನಿ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಹಳಿಯಾಳ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಬಸವರಾಜ ಮಬನೂರ ಅವರು ನೀಡಿದ ದೂರಿನ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.
ಜೂನ್ 14ರಂದು ರಾತ್ರಿ 8ರಿಂದ 9 ಗಂಟೆಯ ನಡುವಿನ ಅವಧಿಯಲ್ಲಿ ಮಂಜುನಾಥನು ಮದ್ಯ ಸೇವಿಸಿ ಹಳಿಯಾಳ ಪಟ್ಟಣದ ಮೌರ್ಯ ಬಾರ್ & ರೆಸ್ಟೋರೆಂಟ್ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಉಪದ್ರವ ನಡೆಸುತ್ತಿದ್ದ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಿಸಲು ಮುಂದಾದ ವೇಳೆ, ಆರೋಪಿ ಇಲಾಖೆಯ ಜೀಪಿಗೆ ಅಡ್ಡಗಟ್ಟಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.
ಇದೇ ವೇಳೆ ಸಿಪಿಸಿ ನಂದೀಶ್ವರ ಗುಡ್ಡೋಡಗಿ ಅವರ ಕೊರಳಪಟ್ಟಿ ಹಿಡಿದು ಎಳೆದಾಡಿ ನೋವುಂಟುಮಾಡಿದ್ದಲ್ಲದೆ, ಸ್ಥಳಕ್ಕೆ ಬಂದಿದ್ದ ಇತರ ಪೊಲೀಸ್ ಸಿಬ್ಬಂದಿಗಳಾದ ಅಶೋಕ ಹುಬ್ಬಳ್ಳಿ ಹಾಗೂ ಹನಮಂತ ಬರಗಿ ಅವರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ.
ಈ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.