ಜನರ ಸಮಸ್ಯೆಗಳನ್ನು ಮಾತಿನ ಮೂಲಕವೇ ಪರಿಹರಿಸಬಹುದು: ಸಿಇಒ ಡಾ. ದಿಲೀಷ್ ಶಶಿ
ಕಾರವಾರ: ಸಾರ್ವಜನಿಕ ಸೇವೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಉತ್ತಮ ಸಂವಹನ ಕೌಶಲ್ಯ ಅತ್ಯಗತ್ಯವಾಗಿದೆ. ಜನರೊಂದಿಗೆ ಸಮರ್ಪಕವಾಗಿ ಸಂವಹನ ನಡೆಸಿದರೆ ಅನೇಕ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು. ಮಾತನಾಡದೇ ಉಳಿದರೆ ಅದೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸುವ ಸಾಧ್ಯತೆಯಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಹೇಳಿದರು.
ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಂಗವಾಗಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ಆಯೋಜಿಸಿದ್ದ ಭಾಷಣ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ವಿವಿಧ ಯೋಜನೆಗಳು ಹಾಗೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲು ಪರಿಣಾಮಕಾರಿ ಸಂವಹನ ಅತ್ಯಗತ್ಯವಾಗಿದೆ. ಸ್ವೀಪ್ (SVEEP) ಸಮಿತಿಯ ಮೂಲಕ ಜಿಲ್ಲಾದ್ಯಂತ ಎಸ್ಐಆರ್ ಕುರಿತು ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರತಿಯೊಬ್ಬ ಮತದಾರನನ್ನು ತಲುಪುವ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಶೇ. 91ರಷ್ಟು ಪ್ರಗತಿ ಸಾಧಿಸಲು ಸ್ವೀಪ್ ಸಮಿತಿಯ ಪರಿಣಾಮಕಾರಿ ಸಂವಹನವೇ ಪ್ರಮುಖ ಕಾರಣವಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೆಸ್ತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.