ಹಳಿಯಾಳ: ಶೌಚಾಲಯದಲ್ಲಿ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೆ ಮೃ*ತಪಟ್ಟ ಘಟನೆ ನಡೆದಿದ್ದು, ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರನ್ನು ಯಲ್ಲವ್ವಾ ಕೋಂ ಗುರುಪಾದ ಮುಮ್ಮಿಗಟ್ಟಿ (67), ಗುತ್ತಿಗೇರಿ ಗಲ್ಲಿ, ಹಳಿಯಾಳ ನಿವಾಸಿ ಎಂದು ಗುರುತಿಸಲಾಗಿದೆ.
ಈ ಕುರಿತು ಮುತ್ತು ಜಯಪಾಲ ಕುಲಕರ್ಣಿ (26), ಗುತ್ತಿಗೇರಿ ಗಲ್ಲಿ, ಹಳಿಯಾಳ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ದೂರಿನ ಪ್ರಕಾರ, ಏಪ್ರಿಲ್ 21ರಂದು ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ಯಲ್ಲವ್ವಾ ಅವರು ಮನೆಯಲ್ಲಿ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗಾಗಿ ತೆರಳಿದಾಗ ಆಯತಪ್ಪಿ ಕಾಲು ಜಾರಿ ಬಿದ್ದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಮನೆಯವರು ಖಾಸಗಿ ವಾಹನದಲ್ಲಿ ಹಳಿಯಾಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಧಾರವಾಡ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿಯೂ ಹೆಚ್ಚಿನ ಚಿಕಿತ್ಸೆಗೆ ಸಲಹೆ ನೀಡಿದ ಕಾರಣ ಅದೇ ದಿನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಮುಂದುವರಿದಿದ್ದರೂ, ಏಪ್ರಿಲ್ 24ರಂದು ಸಂಜೆ 5.53ಕ್ಕೆ ಯಲ್ಲವ್ವಾ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಮೃತರ ಸಾವಿನಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕುಟುಂಬದವರು ತಿಳಿಸಿದ್ದು, ಮುಂದಿನ ಕ್ರಮಕ್ಕಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.