ಶಿರಸಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ವಾಸಸ್ಥಳ ದೃಢೀಕರಣ ಪತ್ರದ ಮಾನ್ಯತೆ ಕುರಿತು ಉಂಟಾಗಿರುವ ಗೊಂದಲ ನಿವಾರಿಸಲು ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.
ಮತದಾರರ ಅನುಕೂಲಕ್ಕಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೀಡಲಾಗುವ ವಾಸಸ್ಥಳ ದೃಢೀಕರಣ ಪತ್ರವನ್ನು ಅಗತ್ಯ ದಾಖಲೆಗಳ ಪೈಕಿ ಪರಿಗಣಿಸುವ ಕುರಿತು ಚುನಾವಣಾ ಆಯೋಗ ಸ್ಪಷ್ಟ ಮಾರ್ಗಸೂಚಿ ಪ್ರಕಟಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾರತದ ಪೌರತ್ವ ಸಾಬೀತುಪಡಿಸುವ ದಾಖಲೆಗಳ ಪಟ್ಟಿಯಲ್ಲಿ ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಅವಕಾಶ ನೀಡಲಾಗಿದೆ. ಇದೇ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂನ್ 20ರಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೂಲಕ ವಾಸಸ್ಥಳ ದೃಢೀಕರಣ ಪತ್ರ ವಿತರಿಸಲು ಸೂಚನೆ ನೀಡಿದ್ದರು ಎಂದು ಅವರು ತಿಳಿಸಿದ್ದಾರೆ.
ಆದರೆ ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಕಂದಾಯ ಇಲಾಖೆಯಿಂದ ನಿರ್ದಿಷ್ಟ ಅಧಿಕಾರಿಗಳಿಂದ ನೀಡಲಾದ ಶಾಶ್ವತ ನಿವಾಸಿ ಪ್ರಮಾಣಪತ್ರವೇ ಮಾನ್ಯ ದಾಖಲೆ ಎಂದು ಉಲ್ಲೇಖಿಸಿರುವುದು ಮತದಾರರಲ್ಲಿ ಗೊಂದಲಕ್ಕೆ ಕಾರಣವಾಗಿದೆ ಎಂದು ರವೀಂದ್ರ ನಾಯ್ಕ ಹೇಳಿದ್ದಾರೆ.
ಉಪ ತಹಶೀಲ್ದಾರ್ ಹಂತಕ್ಕಿಂತ ಕೆಳಮಟ್ಟದ ಅಧಿಕಾರಿಗಳು ನೀಡುವ ಪ್ರಮಾಣಪತ್ರಗಳ ಕಾನೂನಾತ್ಮಕ ಮಾನ್ಯತೆ ಕುರಿತು ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಹಿತದೃಷ್ಟಿಯಿಂದ ಚುನಾವಣಾ ಆಯೋಗ ಸ್ಪಷ್ಟ ಮಾಹಿತಿ ನೀಡಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.
ವಾಸಸ್ಥಳ ದೃಢೀಕರಣ ಪತ್ರವು ಕೇವಲ ವಿಳಾಸದ ದೃಢೀಕರಣಕ್ಕೋ ಅಥವಾ ಪೌರತ್ವದ ದೃಢೀಕರಣಕ್ಕೂ ಅನ್ವಯವಾಗುತ್ತದೆಯೋ ಎಂಬ ವಿಚಾರದಲ್ಲಿ ಸ್ಪಷ್ಟನೆ ಅಗತ್ಯವಾಗಿದೆ. ಶಾಶ್ವತ ನಿವಾಸಿ ಪ್ರಮಾಣಪತ್ರ ಮತ್ತು ಗ್ರಾಮ ಪಂಚಾಯಿತಿಯಿಂದ ನೀಡಲಾಗುವ ವಾಸಸ್ಥಳ ದೃಢೀಕರಣ ಪತ್ರಗಳ ನಡುವಿನ ವ್ಯತ್ಯಾಸವನ್ನು ಚುನಾವಣಾ ಆಯೋಗ ಅಧಿಕೃತವಾಗಿ ತಿಳಿಸಬೇಕು ಎಂದು ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.