ಯಲ್ಲಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ವತಿಯಿಂದ ತಾಲೂಕಿನ ಹುತ್ಕಂಡ ಹೋಬಳಿಯ ಹುಬ್ನಳ್ಳಿಯಲ್ಲಿ ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನ ಪರಿಚಯಿಸುವ ಉದ್ದೇಶದಿಂದ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಎಂ ಅವರು ಯಂತ್ರದ ಮೂಲಕ ಭತ್ತ ನಾಟಿ ಮಾಡುವ ವಿಧಾನದ ಪ್ರಾತ್ಯಕ್ಷಿಕೆ ನೀಡುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೃಷಿಯಲ್ಲಿ ಯಾಂತ್ರೀಕರಣ ಅಳವಡಿಸಿಕೊಳ್ಳುವುದರಿಂದ ಸಮಯ ಹಾಗೂ ಕಾರ್ಮಿಕ ವೆಚ್ಚ ಉಳಿತಾಯವಾಗುವುದರ ಜೊತೆಗೆ ಉತ್ಪಾದಕತೆ ಹೆಚ್ಚಿಸಲು ಸಹಕಾರಿಯಾಗುತ್ತದೆ. ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಕೃಷಿಯನ್ನು ಇನ್ನಷ್ಟು ಲಾಭದಾಯಕವಾಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಬಳಿಕ ಚಂದ್ರಕಾಂತ್ ನಾಯ್ಕ ಅವರ ಗದ್ದೆಯಲ್ಲಿ ನಾಟಿ ಯಂತ್ರಕ್ಕೆ ಪೂಜೆ ಸಲ್ಲಿಸಿ, ಯಂತ್ರದ ಮೂಲಕ ಭತ್ತ ನಾಟಿ ಮಾಡುವ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು. ಇದೇ ವೇಳೆ ಜಿಲ್ಲಾ ನಿರ್ದೇಶಕ ದಿನೇಶ್ ಹಾಗೂ ಕೃಷಿ ಅಧಿಕಾರಿಗಳು ರೈತರೊಂದಿಗೆ ಸಂವಾದ ನಡೆಸಿ, ಯಾಂತ್ರೀಕೃತ ಕೃಷಿಯ ಉಪಯೋಗಗಳು ಮತ್ತು ನಾಟಿ ಯಂತ್ರದ ಕಾರ್ಯವೈಖರಿ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಸಂತೋಷ್, ವಲಯ ಮೇಲ್ವಿಚಾರಕ ಚೆನ್ನಬಸಪ್ಪ, ಕೃಷಿ ಇಲಾಖೆ ಅಧಿಕಾರಿಗಳು, ವಲಯ ಮೇಲ್ವಿಚಾರಕರು, ಶೌರ್ಯ ತಂಡದ ಸ್ವಯಂಸೇವಕರು ಹಾಗೂ ರೈತರು ಭಾಗವಹಿಸಿದ್ದರು.
ಯೋಜನೆಯ ಸೇವಾ ಪ್ರತಿನಿಧಿ ಮಂಜುನಾಥ ಹೆಗಡೆ (ಸುಂಗನಮಕ್ಕಿ) ಕಾರ್ಯಕ್ರಮವನ್ನು ಸಂಯೋಜಿಸಿ, ನಿರ್ವಹಿಸಿದರು.