ಕಾರವಾರ: ಜಿಲ್ಲೆಯ ಮುರ್ಡೇಶ್ವರ ಹಾಗೂ ಚಿತ್ತಾಕುಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಆರೋಪದಡಿ ಇಬ್ಬರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಮುರ್ಡೇಶ್ವರದ ನಾಕಾ ಸಮೀಪದ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಬಳ್ಳಾರಿ ಜಿಲ್ಲೆಯ ಕುಡತಿನಿ ನಿವಾಸಿ ಅನಿಲಕುಮಾರ ಕೆ. (25) ಎಂಬುವನನ್ನು ಮುರ್ಡೇಶ್ವರ ಪೊಲೀಸ್ ಠಾಣೆಯ ತನಿಖಾ ಪಿಎಸ್ಐ ಲೋಕನಾಥ ರಾಠೋಡ ಹಾಗೂ ಸಿಬ್ಬಂದಿ ವಶಕ್ಕೆ ಪಡೆದಿದ್ದರು.
ನಂತರ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆರೋಪಿಯು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಇನ್ನೊಂದು ಪ್ರಕರಣದಲ್ಲಿ, ಕಾರವಾರ ತಾಲೂಕಿನ ಸದಾಶಿವಗಡದ ಲೋಟಸ್ ಹೋಟೆಲ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಆರೋಪದ ಮೇಲೆ ಕಾರವಾರದ ಹಬ್ಬುವಾಡಾ ನಿವಾಸಿ ಹಾಗೂ ಕಾಲೇಜು ವಿದ್ಯಾರ್ಥಿಯೋರ್ವನ ವಿರುದ್ಧ ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕ ಸಂತೋಷ ಆರ್. ನಾಯ್ಕ ಅವರು ಸರ್ಕಾರದ ಪರವಾಗಿ ದೂರು ದಾಖಲಿಸಿದ್ದು, ಎನ್ಡಿಪಿಎಸ್ ಕಾಯ್ದೆಯಡಿಯಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
**ಕ್ಷಣಿಕ ಖುಷಿಗಾಗಿ ಜೀವನವನ್ನೇ ಬಲಿ ಕೊಡಬೇಡಿ**