ಭಟ್ಕಳ: ಶಿರಾಲಿಯ ಪ್ರಸಿದ್ಧ ಶ್ರೀ ಮಹಾಗಣಪತಿ ಮಹಾಮಾಯೆ (ಎಂ.ಜಿ.ಎಂ.) ದೇವಸ್ಥಾನದಲ್ಲಿ ಗ್ಯಾಸ್ ಕಟರ್ ಬಳಸಿ ಕಬ್ಬಿಣದ ಬಾಗಿಲು ಕತ್ತರಿಸಿ ಕಳ್ಳತನಕ್ಕೆ ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದೇವಸ್ಥಾನದಲ್ಲಿದ್ದವರು ಎಚ್ಚರಗೊಂಡು ಕೂಗಿಕೊಂಡ ಹಿನ್ನೆಲೆಯಲ್ಲಿ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ.
ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜೂನ್ 29ರಂದು ರಾತ್ರಿ ಸುಮಾರು 1.55ರ ವೇಳೆಗೆ ನಡೆದಿದೆ. ದೇವಸ್ಥಾನದ ಹಿಂಭಾಗದ ಕಬ್ಬಿಣದ ಬಾಗಿಲನ್ನು ಗ್ಯಾಸ್ ಕಟರ್ನಿಂದ ಕತ್ತರಿಸಿ ಒಳನುಗ್ಗಲು ದುಷ್ಕರ್ಮಿಗಳು ಯತ್ನಿಸಿದ್ದರು.
ಆ ವೇಳೆ ದೇವಸ್ಥಾನದಲ್ಲಿದ್ದವರು ಶಬ್ದ ಕೇಳಿ ಹೊರಬಂದು ಕೂಗಿಕೊಂಡಿದ್ದಾರೆ. ಇದರಿಂದ ಗಾಬರಿಗೊಂಡ ಕಳ್ಳರು ಸ್ಥಳದಿಂದ ಓಡಿ ಹೋಗಿದ್ದಾರೆ. ದೇವಸ್ಥಾನದಲ್ಲಿದ್ದ ಬಂಗಾರದ ಹಾಗೂ ಬೆಳ್ಳಿಯ ಆಭರಣಗಳು ಸೇರಿದಂತೆ ಇತರ ಅಮೂಲ್ಯ ವಸ್ತುಗಳನ್ನು ಕಳವು ಮಾಡುವ ಉದ್ದೇಶದಿಂದ ಕಳ್ಳತನಕ್ಕೆ ಯತ್ನಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೇವಸ್ಥಾನದ ವ್ಯವಸ್ಥಾಪಕ ಅಜಯ್ ಜಯಕರ ಪ್ರಭು ನೀಡಿದ ದೂರಿನ ಆಧಾರದ ಮೇಲೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.