ಸಿದ್ದಾಪುರ: ತಾಲೂಕಿನ ಹಾಳದಕಟ್ಟಾ ಸಮೀಪದ ನಿವಾಸಿಯೊಬ್ಬರ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿ ಕತ್ತಿ ತೋರಿಸಿ ಬೆದರಿಕೆ ಹಾಕಿ, ಮಹಿಳೆಯ ಕುತ್ತಿಗೆಯಲ್ಲಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಬಂಗಾರದ ತಾಳಿ ಸರ ಕಸಿದು ಪರಾರಿಯಾದ ಘಟನೆ ನಡೆದಿದೆ.
ಪದ್ಮರಾಜ್ ವಿಲ್ಲಾ ನಿವಾಸಿ ಪೂನಮ್ ಶೇಟ್ ನೀಡಿದ ದೂರಿನ ಪ್ರಕಾರ, ಸೋಮವಾರ ಸಂಜೆ ಸುಮಾರು 4.22ರ ವೇಳೆಗೆ 25ರಿಂದ 30 ವರ್ಷದೊಳಗಿನ ಅಪರಿಚಿತ ವ್ಯಕ್ತಿಯೊಬ್ಬ ಕೈಯಲ್ಲಿ ಕತ್ತಿ ಹಿಡಿದು ಮನೆಗೆ ನುಗ್ಗಿದ್ದಾನೆ. ಬಳಿಕ “ಬಂಗಾರ ಕೊಡು” ಎಂದು ಬೆದರಿಕೆ ಹಾಕಿ ಮಹಿಳೆಯ ಕುತ್ತಿಗೆಯಲ್ಲಿದ್ದ ತಾಳಿ ಸರ ಕಸಿಯಲು ಯತ್ನಿಸಿದ್ದಾನೆ.
ಮಹಿಳೆ ಪ್ರತಿರೋಧ ವ್ಯಕ್ತಪಡಿಸಿ ಮನೆಯಿಂದ ಹೊರಬರಲು ಪ್ರಯತ್ನಿಸಿದ ವೇಳೆ ಆರೋಪಿಯು ತಾಳಿ ಸರವನ್ನು ಬಲವಂತವಾಗಿ ಎಳೆದಿದ್ದು, ಸರ ತುಂಡಾಗಿ ಸುಮಾರು 20.5 ಗ್ರಾಂ ತೂಕದ ಬಂಗಾರದ ತಾಳಿ ಸರದ ಭಾಗ ಹಾಗೂ ಆಂಟಿಕ್ ಕ್ವಾಯಿನ್ ಸಹಿತ ಒಟ್ಟು ಅಂದಾಜು 3 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ.
ಘಟನೆಯಲ್ಲಿ ಮಹಿಳೆಯ ಕುತ್ತಿಗೆಗೆ ಗಾಯವಾಗಿದೆ.ಮನೆಯವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಂಗಳವಾರ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ.