ಮುಂಡಗೋಡ: ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಆ ನಿಟ್ಟಿನಲ್ಲಿ ಸಾಮಾಜಿಕ ಪರಿಶೋಧನಾ ತಂಡದ ಕಾರ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ನಿರ್ದೇಶಕ ಸಿ.ಕೆ. ಮಲ್ಲಪ್ಪ ಹೇಳಿದರು.
ಮುಂಡಗೋಡ ತಾಲೂಕಿನ ಕಾತೂರು ಗ್ರಾಮ ಪಂಚಾಯತಿಯಲ್ಲಿ ಬುಧವಾರ ನಡೆದ ಸಾಮಾಜಿಕ ಪರಿಶೋಧನಾ ಕಾರ್ಯದ ಪರಿಶೀಲನೆ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳ ಸಂಪನ್ಮೂಲ ವ್ಯಕ್ತಿಗಳು ಮತ್ತು ಗ್ರಾಮ ಸಂಪನ್ಮೂಲ ವ್ಯಕ್ತಿಗಳ ಸಾಮಾಜಿಕ ಪರಿಶೋಧನಾ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಪಾಡುವುದು, ಕಾಮಗಾರಿಗಳ ಗುಣಮಟ್ಟ ಪರಿಶೀಲಿಸುವುದು, ದಾಖಲೆಗಳ ಪರಿಶೀಲನೆ, ವಿಶೇಷ ಗ್ರಾಮ ಸಭೆ ಆಯೋಜನೆ, ಜನರ ಸಹಭಾಗಿತ್ವ ಹೆಚ್ಚಿಸುವುದು ಹಾಗೂ ಕ್ರಮ ಮತ್ತು ವಸೂಲಾತಿ ಪ್ರಕ್ರಿಯೆಗಳನ್ನು ಸಮರ್ಪಕವಾಗಿ ಅನುಸರಿಸುವ ಕುರಿತು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿಗಳಿಗೆ ಅವರು ಮಾರ್ಗದರ್ಶನ ನೀಡಿ, ಜೊತೆಗೆ ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ಕೂ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.
ಇದೇ ವೇಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಬಸನಕಟ್ಟೆ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ತಾಂತ್ರಿಕ ಸಂಯೋಜಕರು ಹಾಗೂ ತಾಂತ್ರಿಕ ಸಹಾಯಕರೊಂದಿಗೆ ಕಾಮಗಾರಿ ನಿರ್ವಹಣೆ ಕುರಿತು ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ವಾಯ್. ದಾಸನಕೊಪ್ಪ, ಸಹಾಯಕ ನಿರ್ದೇಶಕ (ಗ್ರಾಉ) ಸೋಮಲಿಂಗಪ್ಪ ಛಬ್ಬಿ, ಸಹಾಯಕ ಅಭಿಯಂತರ ದೀಪಾ ಎಸ್. ಶೆಡಗೇರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಾಮಾಜಿಕ ಪರಿಶೋಧನಾ ಜಿಲ್ಲಾ ಸಮಾಲೋಚಕರು, ತಾಲೂಕು ಹಾಗೂ ಗ್ರಾಮ ಮಟ್ಟದ ಸಂಪನ್ಮೂಲ ವ್ಯಕ್ತಿಗಳು, ಮನರೇಗಾ ತಾಂತ್ರಿಕ ಸಿಬ್ಬಂದಿ ಮತ್ತು ಕೂಲಿಕಾರರು ಉಪಸ್ಥಿತರಿದ್ದರು.