ಅನರ್ಹರಿಗೆ ಬ್ರೇಕ್; ಮರುಪರಿಶೀಲನೆಗೆ ಸರ್ಕಾರ ಸಜ್ಜು
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ₹2,000 ನೆರವು ಪಡೆಯುತ್ತಿರುವ ಮಹಿಳೆಯರಿಗೆ ರಾಜ್ಯ ಸರ್ಕಾರ ಮಹತ್ವದ ಅಪ್ಡೇಟ್ ನೀಡಿದೆ. ಯೋಜನೆಯ ಲಾಭ ನಿಜವಾದ ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪುವಂತೆ ಮಾಡಲು ಸರ್ಕಾರ ಫಲಾನುಭವಿಗಳ ಮಾಹಿತಿಯ ಸಮಗ್ರ ಮರುಪರಿಶೀಲನೆಗೆ ಮುಂದಾಗಿದೆ.
ಇತ್ತೀಚಿನ ಪರಿಶೀಲನೆ ವೇಳೆ ಕೆಲವು ಅನರ್ಹರು ಯೋಜನೆಯ ಪ್ರಯೋಜನ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ. ಆದಾಯ ತೆರಿಗೆ ಪಾವತಿದಾರರು ಹಾಗೂ ಮೃತರ ಹೆಸರಿನಲ್ಲಿಯೂ ಹಣ ಜಮೆಯಾಗಿರುವ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಸಿದ್ಧತೆ ನಡೆಸಿದೆ.
ಹೊಸ ನಿಯಮದ ಪ್ರಕಾರ, ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನು ಮುಂದೆ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ಅವಕಾಶ ಇರಲಿದೆ. ಖಾಸಗಿ ಸೈಬರ್ ಕೇಂದ್ರಗಳು ಅಥವಾ ಇತರ ಆನ್ಲೈನ್ ಸೇವೆಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ಇದರೊಂದಿಗೆ ಕುಟುಂಬದ ವಾರಸುದಾರರಿಗೂ ಅವಕಾಶ ಕಲ್ಪಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆ ನಿಧನರಾದಲ್ಲಿ, ಅವರ ಕುಟುಂಬದ ಸೊಸೆ ಅಥವಾ ಮಗಳು ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಸಬಹುದು. ಆದರೆ ಅವರ ಹೆಸರು ಕುಟುಂಬದ ಪಡಿತರ ಚೀಟಿಯಲ್ಲಿ ಕಡ್ಡಾಯವಾಗಿ ನಮೂದಾಗಿರಬೇಕು.
ಅರ್ಹತಾ ಮಾನದಂಡಗಳಲ್ಲೂ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಆದಾಯ ತೆರಿಗೆ ಪಾವತಿಸುವವರು, ಕೆಲವು ಎಪಿಎಲ್ ಕಾರ್ಡ್ಧಾರರು ಹಾಗೂ ಈಗಾಗಲೇ ಅನರ್ಹರೆಂದು ಗುರುತಿಸಲ್ಪಟ್ಟವರು ಯೋಜನೆಯ ಲಾಭ ಪಡೆಯಲು ಅರ್ಹರಾಗಿರುವುದಿಲ್ಲ.
ಅರ್ಜಿ ಸಲ್ಲಿಸುವ ವೇಳೆ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ, ಪಡಿತರ ಚೀಟಿ ಹಾಗೂ ಆದಾಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಅರ್ಜಿ ಪರಿಶೀಲನೆ ಮತ್ತು ನೋಂದಣಿ ಪ್ರಕ್ರಿಯೆ ಹಂತ ಹಂತವಾಗಿ ನಡೆಯಲಿದ್ದು, ಫಲಾನುಭವಿಗಳಿಗೆ ಮೊಬೈಲ್ ಸಂದೇಶದ ಮೂಲಕ ಮಾಹಿತಿ ನೀಡುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಲಕ್ಷಾಂತರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಪ್ರಯೋಜನ ಪಡೆಯುತ್ತಿದ್ದು, ಬಾಕಿ ಉಳಿದಿರುವ ಕಂತುಗಳ ಹಣ ಬಿಡುಗಡೆ ಬಳಿಕ ಹೊಸ ನೋಂದಣಿ ಹಾಗೂ ಮರುಪರಿಶೀಲನೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯೋಜನೆಯ ಹಣ ಸರಿಯಾದ ಫಲಾನುಭವಿಗಳಿಗೆ ತಲುಪುವಂತೆ ಹಾಗೂ ಅನರ್ಹರನ್ನು ಹೊರಗಿಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.