ನಕಲಿ ದಾಖಲೆ ಸೃಷ್ಟಿಸಿ ವಂಚನೆ ಆರೋಪ
ಹಳಿಯಾಳ: ಸರ್ಕಾರಿ ಜಮೀನು ಹಂಚಿಕೆ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ವಂಚನೆ ಎಸಗಿರುವ ಆರೋಪದಡಿ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಹಾಯಕ ಕಾರ್ಯಪಾಲ ಅಭಿಯಂತರ ಹಾಗೂ ಮಹಿಳೆಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಾಡ ಗ್ರಾಮದ ನಿವಾಸಿ ಹಾಗೂ ಪತ್ರಕರ್ತ ಬಸವರಾಜ ಮಲ್ಲಪ್ಪ ನಾಯಕಮನೆ (43) ಅವರು ನೀಡಿದ ದೂರಿನ ಮೇರೆಗೆ, ಸಹಾಯಕ ಕಾರ್ಯಪಾಲ ಅಭಿಯಂತರ ಲಕ್ಷ್ಮೀನಾರಾಯಣ ಹೆಗಡೆ ಹಾಗೂ ಹೀನಾ ಮಹಮ್ಮದ ಯೂಸುಫ್ ಖಾನ್ (ದಾಂಡೇಲಿ, ಹಳಿಯಾಳ) ವಿರುದ್ಧ ಪ್ರಕರಣ ದಾಖಲಾಗಿದೆ.
ದೂರಿನ ಪ್ರಕಾರ, 2023ರ ಡಿಸೆಂಬರ್ 21ರಂದು ಮಧ್ಯಾಹ್ನ 12.35ರ ಸುಮಾರಿಗೆ, ಸರ್ಕಾರಕ್ಕೆ ವಂಚನೆ ಮಾಡುವ ಉದ್ದೇಶದಿಂದ ಸರ್ಕಾರಿ ಆಸ್ತಿಗೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಲಾಗಿದೆ.
ಹೀನಾ ಮಹಮ್ಮದ ಯೂಸುಫ್ ಖಾನ್ ಅವರಿಗೆ ಹಂಚಿಕೆಯಾಗಿದ್ದ ಜಮೀನಿನ ವಿಸ್ತೀರ್ಣಕ್ಕಿಂತ ಹೆಚ್ಚಿನ ಸರ್ಕಾರಿ ಜಮೀನನ್ನು ಪಡೆಯುವ ಉದ್ದೇಶದಿಂದ ಈ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಮೋಸ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.