ಹಳಿಯಾಳ:ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತ, ನಗುತ್ತ ವಿಚಿತ್ರವಾಗಿ ವರ್ತಿಸುತ್ತಿದ್ದ ಯುವಕನನ್ನು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದು, ವಿಚಾರಿಸಿದಾಗ, ಆ ಯುವಕ ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
ಆರೋಪಿಯನ್ನು ಧಾರವಾಡ ಜಿಲ್ಲೆಯ ಅಳ್ನಾವರದ ಮಿಷನ್ ರೋಡ್ ನಿವಾಸಿ ಶ್ರೀಹರಿ ಸುರೇಶ ಸಾವಂತ (29) ಎಂದು ಗುರುತಿಸಲಾಗಿದೆ.
ಜೂನ್ 30ರಂದು ಬೆಳಿಗ್ಗೆ ಸುಮಾರು 11.45ಕ್ಕೆ ಹಳಿಯಾಳ ಪಟ್ಟಣದ ಕಿಲ್ಲಾ ಮಲ್ಲಿಕಾರ್ಜುನ ದೇವಸ್ಥಾನದ ಸಮೀಪ ಸಾರ್ವಜನಿಕ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಗಲಾಟೆ ನಡೆಸುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ಗಸ್ತಿನಲ್ಲಿದ್ದ ಹಳಿಯಾಳ ಪೊಲೀಸ್ ಠಾಣೆಯ ತನಿಖಾ ಪಿಎಸ್ಐ ಮಹೇಶ ಮಾಳಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರು.
ಈ ವೇಳೆ ವ್ಯಕ್ತಿಯನ್ನು ವಿಚಾರಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದಾಗಿ ತಿಳಿಸಿದ್ದಾನೆ. ನಂತರ ಆತನನ್ನು ವೈದ್ಯಕೀಯ ಪರೀಕ್ಷೆಗೆ ಹಳಿಯಾಳ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ವೈದ್ಯಾಧಿಕಾರಿಗಳು ಪ್ರಮಾಣಪತ್ರ ನೀಡಿದ್ದಾರೆ.
ವೈದ್ಯಕೀಯ ವರದಿಯ ಆಧಾರದ ಮೇಲೆ ಆರೋಪಿ ವಿರುದ್ಧಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.