ಹೊನ್ನಾವರ: ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ದೊಡ್ಡಹಿತ್ತಲು, ಹೊಸಾಕುಳಿ ನಿವಾಸಿ ಶ್ರೀಪಾದ ನಾಯ್ಕ (55) ಮೃತರು. ಇವರು ಕೃಷಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದು, ತೆಂಗಿನ ಮರ ಹತ್ತಿ ಕಾಯಿ ಕೀಳುವ ಕೆಲಸವನ್ನೂ ಮಾಡುತ್ತಿದ್ದರು.
ಮೇ 2ರಂದು ಬೆಳಿಗ್ಗೆ ಹೊಸಾಕುಳಿ ದೊಡ್ಡಹಿತ್ತಲು ಗ್ರಾಮದಲ್ಲಿರುವ ಮಂಜುನಾಥ ತಿಮ್ಮಪ್ಪ ನಾಯ್ಕ ಅವರ ತೋಟದಲ್ಲಿ ತೆಂಗಿನ ಕಾಯಿ ಕೀಳುವ ಕೆಲಸ ಮಾಡುತ್ತಿದ್ದ ವೇಳೆ, ಮಧ್ಯಾಹ್ನ ಸುಮಾರು 12.30ರ ಸುಮಾರಿಗೆ ಕಾಲು ಜಾರಿ ಮರದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಹೊನ್ನಾವರ ತಾಲೂಕು ಆಸ್ಪತ್ರೆಗೆ ಕರೆದೊಯ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಧ್ಯಾಹ್ನ 2.30ರ ಸುಮಾರಿಗೆ ಭಟ್ಕಳ ಸಮೀಪ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಈ ಕುರಿತು ಮೃತರ ತಮ್ಮ ಮಂಜುನಾಥ ನಾಯ್ಕ ನೀಡಿದ ದೂರಿನ ಆಧಾರದಲ್ಲಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.