ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಭೂಕುಸಿತದ ಹಾಟ್ಸ್ಪಾಟ್ ಪ್ರದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಹೆಬ್ಬಾರಕುಂಬ್ರಿ ಸಮೀಪದ ರಸ್ತೆಯ ಮೊದಲ ತಿರುವಿನಲ್ಲಿ ಧರೆ ಕುಸಿದು, ಬಂಡೆಕಲ್ಲು ಹಾಗೂ ಮಣ್ಣು ರಸ್ತೆಗೆ ಅಡ್ಡಲಾಗಿ ಬಿದ್ದಿದೆ.
ಇದರಿಂದ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮತ್ತಷ್ಟು ಹೆಚ್ಚಿದೆ. ಕಳೆದ ಕೆಲವು ವರ್ಷಗಳಿಂದ ಈ ಪ್ರದೇಶದಲ್ಲಿ ಮಳೆಗಾಲ ಬಂದಾಗಲೆಲ್ಲ ಭೂಕುಸಿತದ ಭೀತಿ ಕಾಡುತ್ತಿದ್ದು, ಕಳಚೆ ಈಗಾಗಲೇ ಜಿಲ್ಲಾಡಳಿತದ ಗಮನ ಸೆಳೆದಿರುವ ಭೂಕುಸಿತ ಹಾಟ್ಸ್ಪಾಟ್ ಪ್ರದೇಶವಾಗಿದೆ.
ಸ್ಥಳೀಯರ ಮಾಹಿತಿ ಪ್ರಕಾರ, ಬುಧವಾರ ರಾತ್ರಿಯಿಡೀ ಭಾರೀ ಗಾಳಿ ಸಹಿತ ಸುರಿದ ಮಳೆಯ ಪರಿಣಾಮವಾಗಿ ಈ ಕುಸಿತ ಸಂಭವಿಸಿದೆ. ರಸ್ತೆಯ ಮೇಲೆ ಬಂಡೆಕಲ್ಲು ಮತ್ತು ಮಣ್ಣು ಜಾರಿಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಪರಿಸ್ಥಿತಿಯನ್ನು ಅಧಿಕಾರಿಗಳು ಪರಿಶೀಲಿಸುವ ಅಗತ್ಯ ಎದುರಾಗಿದೆ.
ಮಳೆ ಮುಂದುವರಿದರೆ ಇನ್ನಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂಬ ಆತಂಕ ಗ್ರಾಮಸ್ಥರನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ರಸ್ತೆ ತೆರವುಗೊಳಿಸಿ, ಅಪಾಯದ ಪ್ರದೇಶಗಳ ಸ್ಥಿತಿಯನ್ನು ಪರಿಶೀಲಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳೀಯರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.