ಕಾರವಾರ: ಎಂಜಿನ್ ಕೆಟ್ಟು, ಟಯರ್ ಪಂಚರ್ ಆಗಿರುವ ಬಸ್ಗೆ ಚಾಲಕನನ್ನು ಬದಲಿಸಿದರೆ ಅದು ಓಡುವುದಿಲ್ಲ. ರಾಜ್ಯ ಸರ್ಕಾರದ ಸ್ಥಿತಿಯೂ ಅದೇ ಆಗಿದೆ” ಎಂದು ಬಿಜೆಪಿ ರಾಜ್ಯ ವಕ್ತಾರ ಎಚ್.ಎನ್. ಚಂದ್ರಶೇಖರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾರವಾರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆಯಿಂದ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಸರ್ಕಾರದ ಸಂಪೂರ್ಣ ವ್ಯವಸ್ಥೆಯೇ ಹದಗೆಟ್ಟಿದ್ದು, ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ರಾಜ್ಯದ ಆಡಳಿತ ವೈಖರಿಯ ಬಗ್ಗೆ ಕಾಂಗ್ರೆಸ್ ಪಕ್ಷದ ಶಾಸಕರೇ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವುದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಆಡಳಿತದಲ್ಲಿ ಗೊಂದಲ, ಅಭಿವೃದ್ಧಿ ಕಾರ್ಯಗಳಲ್ಲಿ ಮಂದಗತಿ ಮತ್ತು ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ಮುಂದುವರಿದಿದೆ ಎಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಜಗದೀಶ ನಾಯಕ ಮೊಗಟಾ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬ್ಳೆ, ಸುಭಾಷ್ ಗುನಗಿ, ಸಂಜಯ್ ಸಾಳಂಕಿ, ಸುನಿಲ್ ಸೋನಿ ಹಾಗೂ ಮನೋಜ್ ಭಟ್ ಉಪಸ್ಥಿತರಿದ್ದರು.