2022ರ ಆದೇಶ ಹಿಂಪಡೆದ ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯದ ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧಾರಣೆ ಕುರಿತಾಗಿ ಹಲವು ವರ್ಷಗಳಿಂದ ಚರ್ಚೆಗೆ ಕಾರಣವಾಗಿದ್ದ ವಿವಾದಕ್ಕೆ ರಾಜ್ಯ ಸರ್ಕಾರ ಮಹತ್ವದ ತಿರುವು ನೀಡಿದ್ದು, 2022ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆದು ಹೊಸ ಆದೇಶ ಹೊರಡಿಸಿದೆ.
ಹೊಸ ಆದೇಶದ ಪ್ರಕಾರ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ನಿಗದಿತ ಸಮವಸ್ತ್ರದ ಜೊತೆಗೆ ಹಿಜಾಬ್, ಜನಿವಾರ, ರುದ್ರಾಕ್ಷಿ, ಶಿವಧಾರ ಸೇರಿದಂತೆ ಕೆಲವು ಧಾರ್ಮಿಕ-ಸಾಂಪ್ರದಾಯಿಕ ಗುರುತುಗಳನ್ನು ಧರಿಸಲು ಅವಕಾಶ ನೀಡಲಾಗಿದೆ.
2022ರಲ್ಲಿ ಉಡುಪಿ ಜಿಲ್ಲೆಯಲ್ಲಿ ಆರಂಭವಾದ ಹಿಜಾಬ್ ವಿವಾದ ಬಳಿಕ ಅಂದಿನ ಬಿಜೆಪಿ ಸರ್ಕಾರ ಸಮವಸ್ತ್ರ ನಿಯಮ ಜಾರಿಗೊಳಿಸಿ, ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿತ್ತು. ಬಳಿಕ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದ ಘಟನೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ರಾಷ್ಟ್ರ ಮಟ್ಟದಲ್ಲೂ ಭಾರೀ ಚರ್ಚೆಗೆ ಕಾರಣವಾಗಿತ್ತು.
ಈಗ ಕಾಂಗ್ರೆಸ್ ಸರ್ಕಾರ ಹಿಂದಿನ ಆದೇಶವನ್ನು ಅಧಿಕೃತವಾಗಿ ಹಿಂಪಡೆದಿದ್ದು, ವಿದ್ಯಾರ್ಥಿಗಳನ್ನು ಧಾರ್ಮಿಕ ಗುರುತುಗಳ ಆಧಾರದ ಮೇಲೆ ತರಗತಿ ಅಥವಾ ಪರೀಕ್ಷೆಯಿಂದ ತಡೆಯಬಾರದು ಎಂದು ಸೂಚಿಸಿದೆ.
ಆದರೆ ಸಮವಸ್ತ್ರ ವ್ಯವಸ್ಥೆ ಮುಂದುವರಿಯಲಿದ್ದು, ಧರಿಸುವ ಧಾರ್ಮಿಕ ಗುರುತುಗಳು ಶಿಸ್ತು, ಸುರಕ್ಷತೆ ಹಾಗೂ ವಿದ್ಯಾರ್ಥಿಗಳ ಗುರುತಿನ ವ್ಯವಸ್ಥೆಗೆ ಅಡ್ಡಿಯಾಗಬಾರದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇದೇ ವೇಳೆ ಶಿಕ್ಷಣ ಸಂಸ್ಥೆಗಳಲ್ಲಿ ಕೇಸರಿ ಶಾಲು ಧರಿಸುವುದನ್ನು ನಿರ್ಬಂಧಿಸಲಾಗಿದೆ ಎಂಬ ಚರ್ಚೆಯೂ ರಾಜ್ಯದಲ್ಲಿ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ಆದೇಶವನ್ನು ಹಿಂಪಡೆಯುವ ಮೂಲಕ ಕಾಂಗ್ರೆಸ್ ಸರ್ಕಾರ ಮಹತ್ವದ ರಾಜಕೀಯ ಹಾಗೂ ಆಡಳಿತಾತ್ಮಕ ನಿರ್ಧಾರ ಕೈಗೊಂಡಿದೆ.