ಯಲ್ಲಾಪುರ: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನೂತನ ಸಚಿವ ಸಂಪುಟದ ಎಲ್ಲ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿರುವ ನಾಗರಿಕ ವೇದಿಕೆಯ ಅಧ್ಯಕ್ಷ ರಾಮು ನಾಯ್ಕ, ಈ ಸರ್ಕಾರ ಪೂರ್ಣಾವಧಿ ಸ್ಥಿರವಾಗಿ ಕಾರ್ಯನಿರ್ವಹಿಸಿ ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಲೆಂದು ಆಶಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು,ಇಂದು ಪ್ರಮಾಣವಚನ ಸ್ವೀಕರಿಸಿದ ಸಚಿವರ ಪಟ್ಟಿಯನ್ನು ಗಮನಿಸಿದರೆ, ಹೊರನೋಟಕ್ಕೆ ಎಲ್ಲರೂ ಕಾಂಗ್ರೆಸ್ ಪಕ್ಷದವರೇ ಆಗಿದ್ದರೂ, ಒಳನೋಟದಲ್ಲಿ ಅವರಲ್ಲಿ ಅನೇಕರು ಪಕ್ಷದ ಬಣ ರಾಜಕೀಯದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದವರು.
ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯ ಕೊನೆಯ ಹಂತದವರೆಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಿಂತಿದ್ದವರು, ನಾಯಕತ್ವ ಬದಲಾವಣೆಗೆ ವಿರೋಧ ವ್ಯಕ್ತಪಡಿಸಿದ್ದವರು ಹಾಗೂ ವಿವಿಧ ರಾಜಕೀಯ ಒತ್ತಡಗಳ ಮೂಲಕ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿದ್ದವರು ಇಂದಿನ ಸಚಿವ ಸಂಪುಟದಲ್ಲಿ ಪ್ರಮುಖ ಸ್ಥಾನ ಪಡೆದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ವಿಶೇಷವಾಗಿ, ನಾಯಕತ್ವ ಬದಲಾವಣೆ ಅನಿವಾರ್ಯ ಎಂಬ ಪರಿಸ್ಥಿತಿ ನಿರ್ಮಾಣವಾದ ಸಂದರ್ಭದಲ್ಲಿ ವಿವಿಧ ಸಾಮಾಜಿಕ ಹಾಗೂ ರಾಜಕೀಯ ಸಮೀಕರಣಗಳನ್ನು ಮುಂದಿಟ್ಟುಕೊಂಡು ಒತ್ತಡದ ರಾಜಕಾರಣ ನಡೆಸಿದ ಕೆಲ ನಾಯಕರು ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಸಂಪುಟದ ಮೊದಲ ಹಂತದಲ್ಲೇ ಅವಕಾಶ ಪಡೆದಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.
ಇದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಸಮನ್ವಯ ಮತ್ತು ಒಳಗೊಳ್ಳುವಿಕೆಯ ಆಡಳಿತ ತಂತ್ರವೇ, ಅಥವಾ ಪಕ್ಷದ ಒಳರಾಜಕೀಯದ ಒತ್ತಡಗಳಿಗೆ ನೀಡಿರುವ ರಾಜಕೀಯ ಶರಣಾಗತಿಯೇ ಎಂಬ ಪ್ರಶ್ನೆಗಳು ಸಹಜವಾಗಿ ಉದ್ಭವಿಸುತ್ತವೆ. ಇದಕ್ಕೆ ಸ್ಪಷ್ಟ ಉತ್ತರವನ್ನು ಕಾಲ ಮತ್ತು ಮುಂದಿನ ಆಡಳಿತದ ಬೆಳವಣಿಗೆಗಳೇ ನೀಡಲಿವೆ ಎಂದಿದ್ದಾರೆ.