ಕಾರವಾರ: ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಕುಸಿತದ ಅಪಾಯ ಹೆಚ್ಚಿರುವ ಕಾರಣ, ಕಾರವಾರ ತಾಲೂಕಿನ ಬಿಣಗಾ ಕರಿದೇವಸ್ಥಾನದಿಂದ ಅರಗಾ ಮಹಾದೇವಸ್ಥಾನ ಕ್ರಾಸ್ವರೆಗೆ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಬಿಣಗಾ ಕರಿದೇವಸ್ಥಾನದಿಂದ ಅರಗಾ ಮಹಾದೇವಸ್ಥಾನ ಕ್ರಾಸ್ವರೆಗೆ ಹೆದ್ದಾರಿಯ ಅಂಚಿನಲ್ಲಿರುವ ಗುಡ್ಡದಿಂದ ಮಳೆ ನೀರಿನ ರಭಸಕ್ಕೆ ಕಲ್ಲು-ಮಣ್ಣು ರಸ್ತೆಗೆ ಕುಸಿಯುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಮತ್ತು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಜುಲೈ 4ರಿಂದ ಮಳೆಗಾಲ ಮುಗಿಯುವವರೆಗೆ ಬಿಣಗಾದಿಂದ ಅರಗಾ ಗ್ರಾಮದವರೆಗಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ **ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ** ಇರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸಂಚಾರ ನಿಯಮಗಳನ್ನು ಪಾಲಿಸುವಂತೆ ವಾಹನ ಸವಾರರಿಗೆ ಜಿಲ್ಲಾಡಳಿತ ಮನವಿ ಮಾಡಿದ್ದು, ಸ್ಥಳದಲ್ಲಿರುವ ಪೊಲೀಸ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗೆ ಸಹಕರಿಸುವಂತೆ ಸಾರ್ವಜನಿಕರಿಗೆ ಕೋರಿದೆ.