ಕಾರವಾರದಲ್ಲಿ ಮೊಳಗಿದ ರಾಷ್ಟ್ರಭಕ್ತಿ | ಪ್ರಮುಖ ರಸ್ತೆಗಳಲ್ಲಿ ತಿರಂಗಾ ಯಾತ್ರೆ
ಕಾರವಾರ: ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಹಿನ್ನೆಲೆಯಲ್ಲಿ ಕಾರವಾರದಲ್ಲಿ ದೇಶಭಕ್ತಿಯ ವಾತಾವರಣ ಮತ್ತಷ್ಟು ಕಳೆಗಟ್ಟಿತು. ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ–ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರ ನೇತೃತ್ವದಲ್ಲಿ ಗುರುವಾರ ಭವ್ಯ ಬೈಕ್ ರ್ಯಾಲಿ ನಡೆಯಿತು.
ಮಳೆಯ ನಡುವೆಯೂ ತ್ರಿವರ್ಣ ಧ್ವಜ ಹಿಡಿದು ರ್ಯಾಲಿಯಲ್ಲಿ ಪಾಲ್ಗೊಂಡ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ದೇಶಭಕ್ತಿಯ ಘೋಷಣೆಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದರು. ದೇಶದ ಗಡಿಯಲ್ಲಿ ಹಗಲು-ರಾತ್ರಿ ನಮ್ಮನ್ನು ಕಾಯುತ್ತಿರುವ ಮಾಜಿ ಸೈನಿಕರು ಹಾಗೂ ವೀರ ಸೈನಿಕರ ಸೇವೆಯನ್ನು ಸ್ಮರಿಸಿ ಅವರಿಗೆ ಸನ್ಮಾನ ಸಲ್ಲಿಸಿದ್ದು ರ್ಯಾಲಿಯ ವಿಶೇಷ ಆಕರ್ಷಣೆಯಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ರೂಪಾಲಿ ಎಸ್. ನಾಯ್ಕ, ನಾವು ಚಿಕ್ಕವರಿದ್ದಾಗ ಪ್ರತಿಯೊಂದು ಮನೆಯ ಮೇಲೂ ರಾಷ್ಟ್ರಧ್ವಜ ಹಾರಿಸುವ ಅವಕಾಶ ಅಷ್ಟೊಂದು ಸುಲಭವಾಗಿ ಇರಲಿಲ್ಲ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನದ ಮೂಲಕ ಪ್ರತಿಯೊಂದು ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸುವ ಹೆಮ್ಮೆ ಸಾಕಾರಗೊಳ್ಳುತ್ತಿದೆ ಎಂದರು.
ದೇಶದ ಗಡಿಯಲ್ಲಿ ಸೈನಿಕರು ಮಾಡುತ್ತಿರುವ ತ್ಯಾಗ ಮತ್ತು ದೇಶದ ಪ್ರತಿಯೊಂದು ಮನೆಯ ಮೇಲೂ ಹಾರುತ್ತಿರುವ ತಿರಂಗಾ ಎರಡೂ ಭಾರತದ ಹೆಮ್ಮೆಯ ಸಂಕೇತಗಳಾಗಿವೆ. ತಿರಂಗಾ ಕೇವಲ ಮೂರು ಬಣ್ಣಗಳ ಧ್ವಜವಲ್ಲ. ಅದರ ಹಿಂದೆ ಸೈನಿಕರ ತ್ಯಾಗ, ಸ್ವಾತಂತ್ರ್ಯ ಹೋರಾಟಗಾರರ ಬಲಿದಾನ ಮತ್ತು ಕೋಟ್ಯಂತರ ಭಾರತೀಯರ ದೇಶಭಕ್ತಿ ಅಡಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ, ನಗರ ಮಂಡಲ ಅಧ್ಯಕ್ಷ ನಾಗೇಶ್ ಕುರ್ಡೆಕರ, ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ್ ಗುನಗಿ, ನಗರಸಭೆ ಮಾಜಿ ಅಧ್ಯಕ್ಷ ರವಿರಾಜ್ ಅಂಕೋಲೆಕರ ಸೇರಿದಂತೆ ಜಿಲ್ಲಾ ಪ್ರಮುಖರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರದ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರು, ಸಾರ್ವಜನಿಕರು ಹಾಗೂ ಮಾಜಿ ಸೈನಿಕರು ಉಪಸ್ಥಿತರಿದ್ದರು.