ಮಕ್ಕಳಿಗೆ SIR ಬಗ್ಗೆ ಪಾಠ ಮಾಡಿದ ಜಿ.ಪಂ ಸಿಇಒ ಡಾ. ದಿಲೀಷ್ ಶಶಿ
ಕಾರವಾರ: ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ದೋಷರಹಿತ ಮತದಾರರ ಪಟ್ಟಿ ತಯಾರಿಸುವ ನಿಟ್ಟಿನಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ -2026 (ಎಸ್.ಆಯ್.ಆರ್.) ಆರಂಭಿಸಲಾಗಿದೆ. ಎಸ್.ಆಯ್.ಆರ್. ಎಂದರೇನು, ಯಾಕೆ ಕೈಗೊಳ್ಳಲಾಗುತ್ತಿದೆ, ನಾಗರಿಕರಿಗೆ ಅದರಿಂದ ಆಗುವ ಪ್ರಯೋಜನವೇನು, ಈ ಪ್ರಕ್ರಿಯೆ ಹೇಗೆ ನಡೆಸಲಾಗುತ್ತಿದೆ ಎಂಬುದರ ಬಗ್ಗೆ ಅತ್ಯಂತ ಸರಳವಾಗಿ ಮಕ್ಕಳಿಗೆ ಅರ್ಥವಾಗುವ ರೀತಿಯಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಡಾ. ದಿಲೀಷ್ ಶಶಿ ಅವರು ಪಾಠ ಮಾಡಿದರು.
ರವಿವಾರದಂದು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2026ರ ಅಂಗವಾಗಿ ಆಯೋಜಿಸಲಾಗಿದ್ದ ಚದುರಂಗ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಭವಿಷ್ಯದ ಪ್ರಜೆಗಳಾದ ಮಕ್ಕಳು ಎಸ್.ಆಯ್.ಆರ್. ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರಬೇಕು. ನಿಮ್ಮ ಪಾಲಕರಿಗೆ ಅಥವಾ ನೆರೆಹೊರೆಯವರಿಗೆ ಎಸ್.ಆಯ್.ಆರ್. ಬಗ್ಗೆ ಏನಾದರೂ ಗೊಂದಲವಿದ್ದರೆ ನೀವು ಸಹಾಯ ಮಾಡಬೇಕು. ಅಗತ್ಯ ಮಾಹಿತಿಯನ್ನು ತಿಳಿಸಿ ಹೇಳಬೇಕು ಎಂದರು. ಎಸ್.ಆಯ್.ಆರ್. ಕುರಿತು ವ್ಯಾಪಕ ಜನಜಾಗೃತಿ ಮೂಡಿಸಲು ಸ್ವೀಪ್ ಸಮಿತಿ ವತಿಯಿಂದ ಇನ್ನೂ ಹೆಚ್ಚಿನ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದ್ದು ತಾವೆಲ್ಲರೂ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳು ಮಾತ್ರವಲ್ಲದೆ ಎಸ್.ಆಯ್.ಆರ್. ಪ್ರಕ್ರಿಯೆಯನ್ನು ಯಶಸ್ವಿಗೊಳಿಸು ಸಹಕರಿಸಬೇಕು ಎಂದರು.
ಸ್ಪರ್ಧೆಯಲ್ಲಿ 33 ಜನ ವಿಧ್ಯಾರ್ಥಿಗಳು ಭಾಗವಹಿಸಿದ್ದು, ವಿಜೇತರಿಗೆ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡುವುದಾಗಿ ಆಯೋಜಕರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಕರೀಂ ಅಸದಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೆಸ್ತಾ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸತೀಶ್ ನಾಯ್ಕ, ಯುವ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ನಾಯಕ, ಚೆಸ್ ನಿರ್ಣಾಯಕ ಚೆಸ್ ಫಿಡೆ ಆರ್ಬಿಟರ್ ಆನಂದ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾರವಾರ ತಾಲೂಕು ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು, ಪಾಲಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.