ಕಾರವಾರ: ಕಾರವಾರ ಉಪವಿಭಾಗ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಸರಣಿ ದೇವಸ್ಥಾನ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ಕಳುವಾಗಿದ್ದ ಪೂಜಾ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾರವಾರ ನಗರ, ಕಾರವಾರ ಗ್ರಾಮೀಣ ಹಾಗೂ ಚಿತ್ತಾಕುಲಾ ಪೊಲೀಸ್ ಠಾಣೆಗಳಲ್ಲಿ ದೇವಸ್ಥಾನಗಳ ಸ್ವತ್ತು ಕಳುವಿಗೆ ಸಂಬಂಧಿಸಿದಂತೆ ಐದು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.
ಪ್ರಕರಣಗಳ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಬಾತ್ಮೀದಾರರ ಮಾಹಿತಿ, ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಸಾಕ್ಷ್ಯಗಳ ನೆರವಿನಿಂದ ಕಾರವಾರದ ಗಿಂಡಿವಾಡ ನಿವಾಸಿ ವಿನಯ ಅಲಿಯಾಸ್ ವಿನಾಯಕ ದಯಾನಂದ ಗಾಂವಕರ (40) ಎಂಬಾತನನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.
ಆರೋಪಿಯಿಂದ ಒಟ್ಟು 174 ಕೆ.ಜಿ. ತೂಕದ, ಸುಮಾರು ₹87 ಸಾವಿರ ಮೌಲ್ಯದ ಹಿತ್ತಾಳೆ ಮತ್ತು ತಾಮ್ರದ ಪೂಜಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದೇವಸ್ಥಾನಗಳಲ್ಲಿ ಪೂಜೆಗೆ ಬಳಸಲಾಗುತ್ತಿದ್ದ ಘಂಟೆಗಳು, ದೀಪದ ಸಮೆಗಳು ಹಾಗೂ ಆರತಿ ತಟ್ಟೆಗಳು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ.
ಪ್ರಾಥಮಿಕ ವಿಚಾರಣೆಯಲ್ಲಿ ಕಾರವಾರ ನಗರ, ಕಾರವಾರ ಗ್ರಾಮೀಣ ಹಾಗೂ ಚಿತ್ತಾಕುಲಾ ಠಾಣಾ ವ್ಯಾಪ್ತಿಯ ದೇವಸ್ಥಾನಗಳಿಂದಲೇ ಈ ವಸ್ತುಗಳನ್ನು ಕಳವು ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ. ಹಾಗೂ ಕಾರವಾರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಗಿರೀಶ್ ವಿ. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಕಾರವಾರ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕಿ ಜಯಶ್ರೀ ಮಾನೆ ಅವರ ನೇತೃತ್ವದ ತಂಡ ಈ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಪ್ರಕರಣ ಭೇದಿಸಿ ಆರೋಪಿಯನ್ನು ಬಂಧಿಸಿ ಕಳುವಾದ ಸ್ವತ್ತುಗಳನ್ನು ಪತ್ತೆಹಚ್ಚಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಇಲಾಖೆ ಪ್ರಶಂಸಿಸಿದೆ.