ಹೊನ್ನಾವರ: ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನೇ ಗುರಿಯಾಗಿಸಿಕೊಂಡ ಕಳ್ಳರು ಮನೆಗೆ ನುಗ್ಗಿ ಗೋದ್ರೇಜ್ ಕಪಾಟಿನ ಲಾಕರ್ ಮೀಟಿ ತೆರೆದು ₹4.80 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹10 ಸಾವಿರ ನಗದು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಇಡಗುಂಜಿ ಸಮೀಪದ ಕುಳಿಮನೆ ಶಾಂತಿನಗರದಲ್ಲಿ ನಡೆದಿದೆ.
ಆ.11ರಂದು ಬೆಳಗ್ಗೆ 9.45ರಿಂದ ಮಧ್ಯಾಹ್ನ 1 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳತನ ನಡೆದಿದೆ ಎನ್ನಲಾಗಿದೆ. ಶಾಂತಿನಗರದ ಶಿಕ್ಷಕಿ ಸಂಧ್ಯಾ ಗುರುದತ್ತ ಶೇಟ್ (53) ಅವರ ಮನೆಗೆ ನುಗ್ಗಿದ ಕಳ್ಳರು, ಮನೆಯಲ್ಲಿದ್ದ ಗೋದ್ರೇಜ್ ಕಪಾಟನ್ನು ತೆರೆದು ಅದರ ಲಾಕರ್ನ್ನು ಕಬ್ಬಿಣದ ಕತ್ತಿಯಿಂದ ಮೀಟಿ ಒಳಗಿದ್ದ ಚಿನ್ನಾಭರಣ ಹಾಗೂ ನಗದು ಹಣವನ್ನು ದೋಚಿದ್ದಾರೆ.
ಒಟ್ಟು ₹4.90 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳುವಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸಂಧ್ಯಾ ಅವರು ಮಂಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಳವು ಮಾಡಿದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.