ಕಾಚಿಗುಡ-ಮುರುಡೇಶ್ವರ ರೈಲು ಕುಮಟಾದವರೆಗೆ ವಿಸ್ತರಣೆ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದ ಪ್ರಯಾಣಿಕರ ಬಹುಕಾಲದ ಬೇಡಿಕೆಗಳಿಗೆ ಸ್ಪಂದನೆಯಾಗಿ ಕುಮಟಾ ರೈಲ್ವೆ ನಿಲ್ದಾಣದಲ್ಲಿ ಜೂನ್ 20ರಂದು ಮಧ್ಯಾಹ್ನ 2 ಗಂಟೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ವಿಸ್ತರಿತ ರೈಲು ಸೇವೆಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪ್ರಯತ್ನದ ಫಲವಾಗಿ ಮಂಜೂರಾಗಿರುವ ಹಲವು ರೈಲ್ವೆ ಅಭಿವೃದ್ಧಿ ಕಾಮಗಾರಿಗಳು ಹಾಗೂ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ ಇದೇ ಸಂದರ್ಭದಲ್ಲಿ ನಡೆಯಲಿದೆ.
ಪ್ರಯಾಣಿಕರ ಬಹುಕಾಲದ ಬೇಡಿಕೆಯಾಗಿದ್ದ ಕಾಚಿಗುಡ-ಮುರುಡೇಶ್ವರ ರೈಲು ಸೇವೆಯನ್ನು ಇದೀಗ ಕುಮಟಾದವರೆಗೆ ವಿಸ್ತರಿಸಲಾಗುತ್ತಿದೆ. ರೈಲು ಸಂಖ್ಯೆ 12789 ಮತ್ತು 12790ರ ವಿಸ್ತರಿತ ಸೇವೆಗೆ ಸಂಸದರು ಹಸಿರು ನಿಶಾನೆ ತೋರುವ ಮೂಲಕ ಅಧಿಕೃತ ಚಾಲನೆ ನೀಡಲಿದ್ದಾರೆ.
ಈ ಸೇವೆಯಿಂದ ಕುಮಟಾ, ಗೋಕರ್ಣ, ಭಟ್ಕಳ ಸೇರಿದಂತೆ ಕರಾವಳಿ ಭಾಗದ ಪ್ರಯಾಣಿಕರಿಗೆ, ವಿಶೇಷವಾಗಿ ತಿರುಪತಿ ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಇದರ ಜೊತೆಗೆ ಕುಮಟಾ, ಮುರುಡೇಶ್ವರ, ಗೋಕರ್ಣ ಹಾಗೂ ಭಟ್ಕಳ ರೈಲ್ವೆ ನಿಲ್ದಾಣಗಳಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಮತ್ತು ಮೇಲ್ದರ್ಜೆಗೇರಿಸಲಾದ ಪ್ರಯಾಣಿಕರ ಸೌಲಭ್ಯಗಳನ್ನು ಕುಮಟಾ ನಿಲ್ದಾಣದಿಂದಲೇ ಜಂಟಿಯಾಗಿ ಲೋಕಾರ್ಪಣೆಗೊಳಿಸಲಾಗುವುದು.
ಕಾರ್ಯಕ್ರಮದಲ್ಲಿ ಕುಮಟಾ ಕ್ಷೇತ್ರದ ಶಾಸಕ ದಿನಕರ್ ಶೆಟ್ಟಿ, ಕೊಂಕಣ ರೈಲ್ವೆ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಝಾ, ಕೊಂಕಣ ರೈಲ್ವೆಯ ಹಿರಿಯ ಅಧಿಕಾರಿಗಳು, ಜಿಲ್ಲಾ ಮತ್ತು ಸ್ಥಳೀಯ ಆಡಳಿತದ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ಮಹತ್ವದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಸದರ ಕಾರ್ಯಾಲಯ ಪ್ರಕಟಣೆಯಲ್ಲಿ ಮನವಿ ಮಾಡಿದೆ.