ಯಲ್ಲಾಪುರ: ಮಂಗಳೂರಿನಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ಸಂಚಾರಿ ಪೀಠ ಸ್ಥಾಪನೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಉತ್ತರ ಕನ್ನಡ ಜಿಲ್ಲೆಯ ಮೇಲಿನ ಭಾಗದ ತಾಲೂಕುಗಳನ್ನು ಧಾರವಾಡ ಪೀಠದ ಅಧೀನದಲ್ಲೇ ಮುಂದುವರೆಸಬೇಕೆಂದು ಶಾಸಕ ಶಿವರಾಮ ಹೆಬ್ಬಾರ್ ಮನವಿ ಮಾಡಿದ್ದಾರೆ.
ಈ ಕುರಿತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ನಾಯಕ ಆರ್.ವಿ. ದೇಶಪಾಂಡೆ ಹಾಗೂ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ದಾಂಡೇಲಿ, ಹಳಿಯಾಳ, ಯಲ್ಲಾಪುರ, ಮುಂಡಗೋಡ, ಸಿರಸಿ ಹಾಗೂ ಸಿದ್ದಾಪುರ ತಾಲೂಕುಗಳು ಭೌಗೋಳಿಕವಾಗಿ ಮಂಗಳೂರಿನಿಂದ ದೂರವಿದ್ದು, ಆಡಳಿತಾತ್ಮಕ, ಆರ್ಥಿಕ ಹಾಗೂ ಐತಿಹಾಸಿಕವಾಗಿ ಧಾರವಾಡದೊಂದಿಗೆ ಹೆಚ್ಚು ಸಂಪರ್ಕ ಹೊಂದಿವೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಭಾಗದ ಜನರು ಹಲವು ವರ್ಷಗಳಿಂದ ನ್ಯಾಯಾಂಗ ಸಂಬಂಧಿತ ವಿಚಾರಗಳಿಗೆ ಧಾರವಾಡ ಪೀಠವನ್ನೇ ಅವಲಂಬಿಸಿಕೊಂಡಿದ್ದು, ಸಾರ್ವಜನಿಕರ ಅನುಕೂಲತೆ, ನ್ಯಾಯಕ್ಕೆ ಸುಲಭ ಪ್ರವೇಶ ಹಾಗೂ ಪರಿಣಾಮಕಾರಿ ನ್ಯಾಯಾಂಗ ವ್ಯವಸ್ಥೆಯ ದೃಷ್ಟಿಯಿಂದ ಮೇಲ್ಘಟ್ಟ ಭಾಗದ ತಾಲೂಕುಗಳನ್ನು ಧಾರವಾಡ ಪೀಠದ ವ್ಯಾಪ್ತಿಯಲ್ಲೇ ಮುಂದುವರಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.
ಹೀಗಾಗಿ, ಜೋಯಿಡಾ, ಹಳಿಯಾಳ, ಯಲ್ಲಾಪುರ, ಮುಂಡಗೋಡ, ಸಿರಸಿ ಹಾಗೂ ಸಿದ್ದಾಪುರ ತಾಲೂಕುಗಳನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠದ ಅಧೀನದಲ್ಲೇ ಉಳಿಸುವ ಕುರಿತು ಸರ್ಕಾರ ಹಾಗೂ ಹೈಕೋರ್ಟ್ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ಶಾಸಕ ಶಿವರಾಮ ಹೆಬ್ಬಾರ್ ಮನವಿ ಮಾಡಿದ್ದಾರೆ.