ಕಾರವಾರ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೇವಾ ಸಂಕಲ್ಪ ಅಭಿಯಾನದಡಿ ಹರಿದೇವನಗರದಲ್ಲಿ ‘ಆಶೀರ್ವಾದದ ದೀಪ’ ಕಾರ್ಯಕ್ರಮ ನಡೆಯಿತು.
ಹರಿದೇವನಗರದ ಸಾರ್ವಜನಿಕ ಗಣೇಶನ ಸನ್ನಿಧಿಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ಅವರು ಸ್ಥಳೀಯ ನಾಗರಿಕರು ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರೊಂದಿಗೆ ಸೇರಿ 150 ದೀಪಗಳನ್ನು ಬೆಳಗಿಸಿ ಪ್ರಧಾನಿಯವರಿಗೆ ಜನ್ಮದಿನದ ಶುಭಾಶಯ ಕೋರಿದರು. ಇದೇ ವೇಳೆ ನರೇಂದ್ರ ಮೋದಿ ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸಿ, ಅವರ ಸೇವೆಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಸೇವಾ ಸಂಕಲ್ಪ ಅಭಿಯಾನದಡಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರ ಅಧ್ಯಕ್ಷ ನಾಗೇಶ್ ಕುರುಡೇಕರ್, ರವಿರಾಜ್ ಅಂಕೋಲೆಕರ್, ಸುನಿಲ್ ಸೋನಿ, ವೈಶಾಲಿ ತಾಂಡೆಲ್, ಶಿಲ್ಪ ನಾಯ್ಕ್, ಭಾಗ್ಯರತಿ ಮಡಿವಾಳ, ಸಂಗೀತ ದೇವಾಡಿಗ, ಕಲಾವತಿ ಹರಿಕಂತ್ರ, ಸ್ನೇಹ ಗಾಂವ್ಕರ್, ಉಲ್ಲಾಸ್, ಗಣೇಶೋತ್ಸವದ ಆಡಳಿತ ಮಂಡಳಿ ಸದಸ್ಯರು, ಸ್ಥಳೀಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.