ನಿರ್ಲಕ್ಷ್ಯದ ಆರೋಪದಡಿ ಗುತ್ತಿಗೆದಾರ ವಿರುದ್ಧ ಪ್ರಕರಣ
ಮುಂಡಗೋಡ: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಕಾರ್ಮಿಕನನ್ನು ಕೆಲಸಕ್ಕೆ ನಿಯೋಜಿಸಿದ್ದರಿಂದ ಆತ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಗುತ್ತಿಗೆದಾರನ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ನಿವಾಸಿ ಶಂಕ್ರವ್ವ ಮಂಜುನಾಥ ಮಾದರ (36) ನೀಡಿದ ದೂರಿನ ಮೇರೆಗೆ, ಮುಂಡಗೋಡದ ಗುತ್ತಿಗೆದಾರ ಇಸ್ಮಾಯಿಲ್ಸಾಬ್ (48) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಜೂನ್ 26ರಂದು ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂ.2ರಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಅಗತ್ಯ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸದೆ ಮೃತ ಮಂಜುನಾಥ ಅವರನ್ನು ಕಟ್ಟಡದ ಎರಡನೇ ಮಹಡಿಯಲ್ಲಿ ಕೆಲಸಕ್ಕೆ ಹತ್ತಿಸಲಾಗಿತ್ತು. ಕೆಲಸ ನಿರ್ವಹಿಸುತ್ತಿದ್ದಾಗ ಅವರು ಮೇಲಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಾಳುವನ್ನು ಮೊದಲು ಮುಂಡಗೋಡದ ಡಾ. ಭರತ್ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜುಲೈ 5ರಂದು ರಾತ್ರಿ 9.15ಕ್ಕೆ ಅವರು ಮೃತಪಟ್ಟಿದ್ದಾರೆ.
ತನ್ನ ಪತಿಯ ಸಾವಿಗೆ ಗುತ್ತಿಗೆದಾರನ ನಿರ್ಲಕ್ಷ್ಯವೇ ಕಾರಣ ಎಂದು ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.